
ಬೆಂಗಳೂರು: ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ. ಆದರೆ ಕೆಲವು ಟಿವಿ ಚಾನೆಲ್ ಮತ್ತಿತರ ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಗೆ ತೆರಳಿದ್ದೇನೆ ಎಂದು ವರದಿ ಆಗಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ವಿಚಾರ. ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸಲ್ಲದು ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆ.ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿಯವರು ಭೇಟಿಗೆ ಸಮಯ ನೀಡಿರಲಿಲ್ಲ. ಭೇಟಿಗೆ ಕಾದು ಕುಳಿತು ಅವಕಾಶ ಸಿಗದೇ ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದರು. ಅದರೆ, ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.
Advertisement