
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವವರೆಗೆ ಪಕ್ಷ ಮತ್ತು ಸರ್ಕಾರದಲ್ಲಿ ಯಾವುದೇ ಬದಲಾವಣೆಗಳನ್ನು ತರದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಈ ಬೆಳವಣಿಗೆ ಕೈ ಪಾಳಯದ ಕೆಲ ನಾಯಕರಲ್ಲಿ ಅಸಮಾಧಾನವನ್ನು ಮೂಡಿಸಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸುತ್ತಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಗುರುವಾರ, ಸೆಪ್ಟೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳಾಗಲಿದೆ ಎಂದು ಹೇಳಿದ್ದು, ಈ ಹೇಳಿಕೆಗೆ ಭಾರೀ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಎಬ್ಬಿಸಿದೆ.
ರಾಜಣ್ಣ ಅವರು ತಮ್ಮ ಹೇಳಿಕೆ ಮೂಲಕ ಸಿದ್ದರಾಮಯ್ಯ ಅವರನ್ನು ಬದಲಿಸಿದ್ದೇ ಆದರೆ, ಪಕ್ಷದಲ್ಲಿ ಅಸಮಾಧಾನ ಭುಗಿಲೇಳಲಿದೆ ಎಂಬ ಸಂದೇಶವನ್ನು ಹೈಕಮಾಂಡ್'ಗೆ ರವಾನಿಸಿದ್ದಾರೆಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
ಏತನ್ಮಧ್ಯೆ, ರಾಜಣ್ಣ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ರಾಜಣ್ಣ ಹಿರಿಯ ನಾಯಕ, ನನಗೆ ಆ ಕ್ರಾಂತಿಯ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಆಡಳಿತದ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ ಮತ್ತು ಪಕ್ಷದ ಶಾಸಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇವೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ತಿಳಿಸಿದರು.
ಆಡಳಿತದಲ್ಲಿ ಯಾವುದೂ ನಿಯಂತ್ರಣ ತಪ್ಪಿಲ್ಲ. ಏನಾದರೂ ಇದ್ದರೆ, ಸಿಎಂ ಮತ್ತು ನಾನು ನಮ್ಮ ಪಕ್ಷದ ನಾಯಕರೊಂದಿಗೆ ಮಾತನಾಡುತ್ತೇವೆ. ಶಾಸಕರ ಕುಂದುಕೊರತೆಗಳನ್ನು ಆಲಿಸಲು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಿದರು.
ಕುತೂಹಲಕಾರಿಯಾಗಿ, ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಯೋಜನಾ ಆಯೋಗದ ಉಪಾಧ್ಯಕ್ಷರು ಬುಧವಾರ ಸಂಜೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಮೊದಲು ಡಿಕೆಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ಹಲವರ ಹುಬ್ಬೇರುವಂತೆ ಮಾಡಿದೆ.
ಅನೇಕ ಶಾಸಕರು ಇತ್ತೀಚೆಗೆ ತಮ್ಮ ಕುಂದುಕೊರತೆಗಳನ್ನು ಹೇಳಲು ಶಿವಕುಮಾರ್ ಅವರನ್ನು ಭೇಟಿ ಮಾಡಲು ಪ್ರಾರಂಭಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಏತನ್ಮಧ್ಯೆ, ಕೆಪಿಸಿಸಿ ಅಧ್ಯಕ್ಷರಾಗುವ ಆಕಾಂಕ್ಷಿಯಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಾಗುವುದಿಲ್ಲ. ಆದರೆ, ನವೆಂಬರ್ನಲ್ಲಿ ಕೆಲವು ಬದಲಾವಣೆಗಳಾಗಲಿದೆ ಎಂದು ಹೇಳಿದ್ದಾರೆ.
ಮಂಗಳವಾರ ಮತ್ತು ಬುಧವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ತಂಡದ ಸಚಿವ ಸತೀಶ್ ಜಾರಕಿಹೊಳಿ ಕೂಡ ಒಬ್ಬರಾಗಿದ್ದರು.
ಈ ನಡುವೆ ಸಿದ್ದು ಪಾಳಯದ ನಾಯಕರು ರಾಜ್ಯ ಉಸ್ತುವಾರಿ ಹುದ್ದೆಯಲ್ಲಿರುವ ಸುರ್ಜೇವಾಲಾ ಅವರನ್ನು ಬದಲಾಯಿಸುವಂತೆ ಹೈಕಮಾಂಡ್'ನ್ನು ಒತ್ತಾಯಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಬದಲಾವಣೆಗಳಾಗಲಿವೆ. ಆದರೆ, ಹೈಕಮಾಂಡ್ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ.
ಇನ್ನು ನವದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಬಯಸುತ್ತಿದ್ದು, ವಿದೇಶದಿಂದ ಹಿಂತಿರುಗಿದ ಕೂಡಲೇ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.
ಆದರೆ, ರಾಹುಲ್ ಗಾಂಧಿಯವರು ಸಾಮಾಜಿಕ-ಆರ್ಥಿಕ ಶೈಕ್ಷಣಿಕ ಸಮೀಕ್ಷೆ (ಎಸ್ಇಎಸ್-2015) ವಿಚಾರದಲ್ಲಿ ಸಿದ್ದರಾಮಯ್ಯ ಕಾರ್ಯಕ್ಷಮತೆಯ ಬಗ್ಗೆ ಅಸಮಾಧಾನಗೊಂಡಿದ್ದು, ಹೀಗಾಗಿಯೇ ಹೊಸ ಸಮೀಕ್ಷೆ ಕುರಿತ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.
Advertisement