
ಬೆಂಗಳೂರು: ಕಾಂಗ್ರೆಸ್ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ಕೆಪಿಸಿಸಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಶ್ವರ್ಯಾ ದಿವಂಗತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿಯಾಗಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆಆರ್ ನಗರದವರಾದ ಮಂಚನಹಳ್ಳಿ ಮಹಾದೇವ್, ಹಿಂದೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅತ್ಯಾಪ್ತರಾಗಿದ್ದರು. ಮಂಚನಹಳ್ಳಿ ಮಹಾದೇವ್ 14 ವರ್ಷ ಹಿಂದೆ ಇಹಲೋಕ ತ್ಯಜಿಸಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹುದ್ದೆಗೇರಿದ್ದ ಐಶ್ವರ್ಯಾ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದೂ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
Advertisement