
ಬೆಂಗಳೂರು: ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದಕ್ಕೆ ವಿಶೇಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅವಿರತ ಪ್ರಯತ್ನ ಮತ್ತು ಒತ್ತಡ ಕಾರಣ ಎಂದು ಗುರುವಾರ ಹೇಳಿದ್ದಾರೆ.
"ಕೇಂದ್ರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಇದಕ್ಕಾಗಿ ನಾನು ರಾಹುಲ್ ಗಾಂಧಿ ಅವರನ್ನು ಹೆಚ್ಚು ಅಭಿನಂದಿಸುತ್ತೇನೆ. ಏಕೆಂದರೆ, ಕಳೆದ ಐದು ವರ್ಷಗಳಿಂದ, ಅವರು ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಮತ್ತು ಅದಕ್ಕಾಗಿ ವ್ಯಾಪಕ ಪ್ರಯತ್ನ ಮಾಡಿದ್ದಾರೆ" ಎಂದು ಸಿಎಂ ತಿಳಿಸಿದರು.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೇ ಜಾತಿ ಗಣತಿಯನ್ನು ಸೇರಿಸಿದೆ. ಕೇಂದ್ರದ ಈ ನಿರ್ಧಾರ ಮುಂಬರುವ ಬಿಹಾರ ಚುನಾವಣೆಗೆ ಲಿಂಕ್ ಮಾಡಬಹುದು. ಈ ಜನಗಣತಿ ಜೊತೆಗೆ ಸಮಗ್ರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಗತ್ಯವನ್ನು ಸಿದ್ದರಾಮಯ್ಯ ಒತ್ತಿ ಹೇಳಿದರು.
ಈ ಜಾತಿ ಗಣತಿಗೆ ಒಂದು ಟೈಮ್ ಲೈನ್ ನಿಗದಿಪಡಿಸುವಂತೆ ರಾಹುಲ್ ಗಾಂಧಿ ಕೂಡ ಸ್ಪಷ್ಟವಾಗಿ ಹೇಳಿದ್ದಾರೆ ಮತ್ತು ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದರು.
ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.
ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದು ಸಿಎಂ ಹೇಳಿದ್ದಾರೆ.
Advertisement