ಕೇಂದ್ರದ ಕ್ರಮವು ರಾಜ್ಯ ಜಾತಿ ಜನಗಣತಿ ವರದಿ ಕುರಿತ ಗೊಂದಲಗಳಿಗೆ ಅಂತ್ಯ ಹಾಡಲಿದೆ: ಬಿ.ವೈ ವಿಜಯೇಂದ್ರ

2015 ರಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಯು ಹಳೆಯದಾಗಿದ್ದು, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸಲು ಮಾತ್ರ ಬಳಸಲಾಗುತ್ತಿದೆ.
BJP state president BY Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ online desk
Updated on

ಬೆಂಗಳೂರು: ಜನಗಣತಿ ಜತೆಗೆ ಜಾತಿ ಗಣತಿಗೂ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರವು ಜಾತಿ ಜನಗಣತಿಯ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಯತ್ನಗಳಿಗೆ ಅಂತ್ಯ ಹಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015 ರಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಯು ಹಳೆಯದಾಗಿದ್ದು, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸಲು ಮಾತ್ರ ಬಳಸಲಾಗುತ್ತಿದೆ. ಹೀಗಾಗಿ ಎಲ್ಲಾ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಸಿಗುವಂತೆ ಮತ್ತು ಸಬಲೀಕರಣಗೊಳ್ಳುವಂತೆ ನೋಡಿಕೊಳ್ಳಲು ಕೇಂದ್ರವು ಜಾತಿ ಜನಗಣತಿಯ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ,ಕಾಂಗ್ರೆಸ್‌ ಅವಧಿಯಲ್ಲಿ ಜಾತಿ ಸಮೀಕ್ಷೆಯನ್ನು ಏಕೆ ಮಾಡಲಿಲ್ಲ ಎಂದು ಸವಾಲು ಹಾಕಿದರು.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದು ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ. ಬ್ರಿಟಿಷರ ನಂತರ ನೆಹರು, ಇಂದಿರಾಗಾಂಧಿ, ರಾಜೀವ್‌ಗಾಂಧಿ ಪ್ರಧಾನಿಯಾದರೂ, ಕಾಂಗ್ರೆಸ್‌ ಜಾತಿ ಸಮೀಕ್ಷೆ ಮಾಡಲಿಲ್ಲ. ಕಾಂಗ್ರೆಸ್‌ಗೆ ಅಂತಹ ಸಾಮಾನ್ಯ ಜ್ಞಾನ ಕೂಡ ಇಲ್ಲ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಜಾತಿ ಗಣತಿ ಪ್ರಸ್ತಾಪವನ್ನು ತಿರಸ್ಕರಿಸಲಾಗಿತ್ತು. 2029 ಕ್ಕೆ ಮಹಿಳಾ ಮೀಸಲಾತಿ ತರಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದಕ್ಕೆ ಜನಗಣತಿ ಹಾಗೂ ಜಾತಿ ಸಮೀಕ್ಷೆ ನೆರವಾಗಲಿದೆ. ಇಂತಹ ಉತ್ತಮ ಕೆಲಸ ಮಾಡುತ್ತಿರುವ ಪ್ರಧಾನಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದರು.

BJP state president BY Vijayendra
ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ ಶಿವಕುಮಾರ್

ಇದೀಗ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಟೀಕೆ ಮಾಡುತ್ತಿದ್ದಾರೆ. 2015 ರಲ್ಲಿ ಜಾತಿ ಗಣತಿ ಮಾಡಿ ಹತ್ತು ವರ್ಷಗಳ ನಂತರ ಅದನ್ನು ಬಿಡುಗಡೆ ಮಾಡಲಾಯಿತು. ಈ ಬಗ್ಗೆ ಕಾಂಗ್ರೆಸ್‌ ಮೊದಲು ಯೋಚಿಸಬೇಕು. ದೇಶದಲ್ಲಿ ಜಾತಿ ಗಣತಿ ಮಾಡಲು ಆಗಿಲ್ಲವೆಂದು ಕಾಂಗ್ರೆಸ್‌ ಕ್ಷಮೆ ಕೋರಲಿ. ಯಾಕೆ ಮಾಡಿಲ್ಲವೆಂದು ಸಿಎಂ ಸಿದ್ದರಾಮಯ್ಯನವರೇ ತಿಳಿಸಲಿ ಎಂದು ಸವಾಲು ಹಾಕಿದರು.

ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇಲ್ಲ. 150 ಕೋಟಿ ರೂ. ಖರ್ಚಿನಲ್ಲಿ ಮಾಡಿದ ರಾಜ್ಯದ ಜಾತಿ ಗಣತಿ ವರದಿ ಏನಾಗಲಿದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಸಮೀಕ್ಷೆಯ ವೇಳೆ ಯಾರೂ ಯಾರ ಮನೆಗೂ ಹೋಗಿಲ್ಲ ಎಂದು ಸ್ವಾಮೀಜಿಗಳೇ ಹೇಳುತ್ತಿದ್ದಾರೆ. ಈ ಸಮೀಕ್ಷೆಯ ಗತಿ ಏನು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಬೇಕು. ರಾಜ್ಯದ ಜಾತಿ ಗಣತಿ ವರದಿ ವಿರೋಧಿಸಿ ಎಲ್ಲ ಸಮುದಾಯಗಳು ಪ್ರತಿಭಟನೆ ಮಾಡುತ್ತಿವೆ. ಕೆಲವು ಸಮುದಾಯದವರು ತಾವೇ ಸ್ವತಃ ಹೊಸ ಸಮೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಸಚಿವರು ಕೂಡ ಇದನ್ನು ವಿರೋಧಿಸಿದ್ದಾರೆ. ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಈ ವರದಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯನ್ನು ಚುನಾವಣಾ ಆಯೋಗ ಬಳಸಿಕೊಳ್ಳಲಿದೆ. ಆದರೆ ಈ ರಾಜ್ಯದ ವರದಿ ಕಸದ ಬುಟ್ಟಿ ಸೇರಲಿದೆ. ಇದು ಯಾವ ಪ್ರಯೋಜನಕ್ಕೂ ಇರುವುದಿಲ್ಲ. ಸಿದ್ದರಾಮಯ್ಯ ಮನೆಯಲ್ಲಿ ಕುಳಿತು ಬರೆಸಿದ ಈ ವರದಿ ಅಧಿಕೃತವಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com