
ಬೆಂಗಳೂರು: ರಾಮನಗರ ಜಿಲ್ಲೆಯ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ನಡುವಲ್ಲೇ ಆರ್.ಅಶೋಕ್ ಅವರು ಶುಕ್ರವಾರ ರಾಮನಗರ ಎಸ್ಪಿಯನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಪ್ರತಿದಿನ ರಾಜ್ಯದಲ್ಲಿ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ ಎಂದು ಹೇಳಿದರು.
ಬಾಲಕಿಯ ಕುಟುಂಬಸ್ಥರು ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಖಚಿತವಾಗಿ ಹೇಳುತ್ತಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ನಡೆದಿರಬಹುದು ಎಂಬ ವರದಿಗಳೂ ಇವೆ. ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ನನಗೆ ಮಾಹಿತಿ ನೀಡಿದ್ದಾರೆ. ಅಮಾಯಕ ಬಡ ಹುಡುಗಿಯ ಕೊಲೆಯಾಗಿದೆ, ಆಧರೆ, ಪೊಲೀಸರು ಇನ್ನೂ ಸಾವಿನ ಕಾರಣದ ಕುರಿತು ಗೊಂದಲದಲ್ಲಿದ್ದಾರೆ. ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದಾರೆ. ಸಮಗ್ರ ತನಿಖೆ ನಡೆಸುವಂತೆ ಅವರಿಗೆ ಸೂಚಿಸಿದ್ದೇನೆಂದು ಹೇಳಿದರು.
ಪ್ರಕರಣ ಸಂಬಂಧ ಹಲವಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ವಿಧಿವಿಜ್ಞಾನ ವರದಿಯು ಹೆಚ್ಚು ಮುಖ್ಯವಾಗಿದೆ. ಏಕೆಂದರೆ ವರದಿನ್ನು ತಿರುಚಲು ಸಾಧ್ಯವಾಗುವುದಿಲ್ಲ. ಸೂಕ್ಷ್ಮ ತನಿಖೆ ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ನಾನು ಎಸ್ಪಿಗೆ ನಿರ್ದೇಶನ ನೀಡಿದ್ದೇನೆ.
ಕುಟುಂಬಕ್ಕೆ ನ್ಯಾಯ ಸಿಗದಿದ್ದರೆ, ಸರ್ಕಾರವನ್ನು ನಂಬುವುದಾದರೂ ಹೇಗೆ? ರಾಜ್ಯದ ಗೃಹ ಸಚಿವರು ಯಾರೆಂದು ಯಾರಿಗೂ ತಿಳಿದಿಲ್ಲ. ಪರಿಸ್ಥಿತಿ ಹೀಗಿರುವಾಗ, ವಿರೋಧ ಪಕ್ಷವು ಮುಂದೆ ಬಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
Advertisement