
ಬೆಂಗಳೂರು: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಮಂಡಿಸಲು ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ಕಳುಹಿಸುತ್ತಿರುವ ಸರ್ವಪಕ್ಷ ನಿಯೋಗದಲ್ಲಿ ರಾಜ್ಯದ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಬ್ರಿಜೇಶ್ ಚೌಟ ಅವರು ಸ್ಥಾನ ಪಡೆದಿದ್ದಾರೆ.
ನಾನು ಮತ್ತು ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಮೆರಿಕ ಮತ್ತು ಲ್ಯಾಟಿನ್ ಅಮೆರಿಕಕ್ಕೆ ಭೇಟಿ ನೀಡುವ ಸರ್ವಪಕ್ಷ ನಿಯೋಗದ ಭಾಗವಾಗಿದ್ದೇವೆ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ಹೇಳಿದ್ದಾರೆ.
ಮೇ 23 ರಿಂದ ಜೂನ್ 6 ರವರೆಗೆ ನಡೆಯುವ ಈ ಪ್ರವಾಸದಲ್ಲಿ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸರ್ವಪಕ್ಷ ಸಂಸದರ ನಿಯೋಗದಲ್ಲಿ ಸೇರಲಿದ್ದಾರೆ.
ಮೋದಿ ಸರ್ಕಾರವು 32 ದೇಶಗಳು ಮತ್ತು ಯುರೋಪಿಯನ್ ಒಕ್ಕೂಟಕ್ಕೆ ಭೇಟಿ ನೀಡಲು ಏಳು ಸರ್ವಪಕ್ಷ ನಿಯೋಗಗಳನ್ನು ರಚಿಸಿದ್ದು, ಈ ಭೇಟಿಯು ಪ್ರಮುಖ ರಾಜತಾಂತ್ರಿಕ ಪ್ರಯತ್ನದ ಭಾಗವಾಗಿದೆ. ಪ್ರತಿತಂಡವು ನೀತಿ ಮತ್ತು ರಾಜತಾಂತ್ರಿಕ ಪರಿಣತಿಯನ್ನು ಹೊಂದಿರುವ ಸಂಸದರಿಗೆ ಬೆಂಬಲ ನೀಡಲು ನಿವೃತ್ತ ರಾಜತಾಂತ್ರಿಕರನ್ನು ಒಳಗೊಂಡಿದೆ.
ಈ ನಿಯೋಗಗಳು ಭಯೋತ್ಪಾದನೆಯ ಕುರಿತು ಭಾರತದ ದೃಢ ಮತ್ತು ಏಕೀಕೃತ ನಿಲುವನ್ನು ವಿವರಿಸುವ ಮತ್ತು ಗಡಿಯಾಚೆಗಿನ ದಾಳಿಗಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಪುನರುಚ್ಚರಿಸುವ ಗುರಿಯನ್ನು ಹೊಂದಿವೆ ಎಂದು ಅವರು ತೇಜಸ್ವಿ ಸೂರ್ಯ ಉಲ್ಲೇಖಿಸಿದ್ದಾರೆ.
Advertisement