
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಸಂಪುಟಕ್ಕೆ ನವಚೈತನ್ಯದ ಅವಶ್ಯಕತೆ ಇದೆ ಎಂಬ ಕೂಗು ಕಾಂಗ್ರೆಸ್ನಲ್ಲಿ ಜೋರಾಗುತ್ತಿದೆ. ಈ ನಡುವೆ ಮಾಜಿ ಸಚಿವರ ಬಿ.ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ಬೆಂಬಲಿಗರು ಲಾಬಿ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಈ ಹಿಂದೆ ಭರವಸೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸಪೇಟೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಈ ಬಗ್ಗೆ ಘೋಷಣೆ ಮಾಡಬೇಕೆಂದು ನಾಗೇಂದ್ರ ಅವರ ಬೆಂಬಲಿಗರು ಒತ್ತಾಯಿಸಿದರು.
ಕಳೆದ ವರ್ಷ ಜೂನ್ನಲ್ಲಿ, ಮೇ 26, 2024 ರಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ನಂತರ ಬೆಳಕಿಗೆ ಬಂದ 87 ಕೋಟಿ ರೂ. ಹಗರಣದಲ್ಲಿ ನಾಗೇಂದ್ರ ಅವರ ಹೆಸರು ಕೇಳಿಬಂದತ್ತು. ನಂತರ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಜಾರಿ ನಿರ್ದೇಶನಾಲಯ(ಇಡಿ) ನಾಗೇಂದ್ರ ಅವರ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿತು. ಆದಾಗ್ಯೂ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ಈ ನಡುವೆ ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆ ವಿಳಂಬದ ಬಗ್ಗೆ ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಂಡೂರು ಉಪಚುನಾವಣೆಯ ಸಮಯದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ನಾಗೇಂದ್ರ ಅವರನ್ನು ಶೀಘ್ರದಲ್ಲೇ ಮತ್ತೆ ಸಚಿವರನ್ನಾಗಿ ಮಾಡಲಾಗುವುದು ಎಂದು ಘೋಷಿಸಿದ್ದರು, ಆದರೆ, ಐದು ತಿಂಗಳುಗಳು ಕಳೆದರೂ ಈ ನಿಟ್ಟಿನಲ್ಲಿ ಯಾವುದೇ ಘೋಷಣೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಹೊಸಪೇಟೆಯಲ್ಲಿ ನಡೆಯುುವ ಸಾಧನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದು, ಈ ವೇಳೆ ನಾಗೇಂದ್ರ ಅವರ ಬೆಂಬಲಿಗರು ಈ ವಿಚಾರವನ್ನು ಪ್ರಸ್ತಾಪಿಸಲು ಚಿಂತನೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
Advertisement