

ಬೆಂಗಳೂರು: ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ ಆದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನ ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ ಎಂದು ಬಿಜೆಪಿ ಮುಖಂಡ ಆರ್ .ಅಶೋಕ್ ಲೇವಡಿ ಮಾಡಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ಸನ್ಮಾನ್ಯ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್ ಜೆಡಿ - ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು.
ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನ ದಿಕ್ಕು ತಪ್ಪಿಸಲು ಹೊರಟಿದ್ದು ಎಂದು ಹೇಳಿದ್ದಾರೆ.
ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ "ವೋಟ್ ಚೋರಿ" ಪ್ರಹಸನವ್ನ ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ.
ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರೆಂಟಿ.
NDA ಗೆಲುವಿಗೆ ಕಾರಣೀಭೂತರಾದ ಬಿಹಾರ ಬಿಜೆಪಿ ಮತ್ತು ಜೆಡಿಯ ಸೇರಿದಂತೆ ಮೈತ್ರಿಕೂಟದ ಎಲ್ಲ ನಾಯಕರು, ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
Advertisement