

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರ ಬಳಿಯೆ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ, ಇಲ್ಲದಿದ್ದರೆ ಇಲ್ಲ ಎಂದು ಹೇಳಿದರು.
ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ಕಾರ್ಯನಿರ್ವಹಿಸಿದ್ದಾರೆ. ಯಾರಿಗೂ ಗೊತ್ತು ಶಿವಕುಮಾರ್ ಅವರು ಎಂಟು ವರ್ಷ ಒಂದು ದಿನದವರೆಗೆ ಅಧ್ಯಕ್ಷರಾಗಿರಬಹುದು ಎಂದು ತಿಳಿಸಿದರು.
ನವೆಂಬರ್ ಕ್ರಾಂತಿ ಬಗ್ಗೆ ನಮ್ಮ ಪಕ್ಷದ ಕೆಲವು ನಾಯಕರು, ಮುಖಂಡರು ಹೇಳಿಕೆಗಳನ್ನು ಕೊಡುತ್ತಿದ್ದರು. ನಾಳೆ ನ.21ನೇ ತಾರೀಖು ಆಗಲಿದೆ. ಆದರೆ, ಯಾವ ನವೆಂಬರ್ ಕ್ರಾಂತಿಯೂ ನಮಗೆ ಕಾಣಿಸುತ್ತಿಲ್ಲ ಎಂದರು.
ರಾಜ್ಯದಲ್ಲಿ ನಾಯಕತ್ವದ ಕುರಿತು ಈಗಾಗಲೆ ಹಲವು ಬಾರಿ ಮಾತನಾಡಿದ್ದೇನೆ. ಪುನಃ ಅದೇ ವಿಚಾರ ಪ್ರಸ್ತಾವಿಸಲು ನನಗೆ ಇಷ್ಟ ಇಲ್ಲ. ನಾಯಕತ್ವದ ವಿಚಾರದಲ್ಲಿ ಯಾರೋ ನೀಡುವ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದು ಸೂಕ್ತವಲ್ಲ. ಇಂದಿಗೆ ಸರಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದ್ದೇವೆ. ಮುಂದೆಯೂ ಉತ್ತಮ ಆಡಳಿತ ನೀಡುತ್ತೇವೆ ಎಂದು ಹೇಳಿದರು.
Advertisement