
ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ, ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿರುವುದನ್ನು ಸಾಕ್ಷೀಕರಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬುಧವಾರ ನಡೆದ ಗಣೇಶ ಚತುರ್ಥಿ ಆಚರಣೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಪಾಕಿಸ್ತಾನ್ ಜಿಂದಾಬಾದ್ ಕೂಗುವವರು, ಪಾಕಿಸ್ತಾನ್ ಧ್ವಜ ಹಾರಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುವ ಕಾಂಗ್ರೆಸ್ ಸರ್ಕಾರ ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿರುವ ಸಿಟಿ ರವಿ ಅವರ ಮೇಲೆ FIR ದಾಖಲಿಸುವ ಮೂಲಕ ತಮ್ಮದು ಪಕ್ಷಪಾತಿ ಸರ್ಕಾರ, ವಿದ್ರೋಹಿಗಳಿಗೆ ಕುಮ್ಮಕ್ಕು ನೀಡುವ ಸರ್ಕಾರ ಎನ್ನುವುದನ್ನು ಸಾಕ್ಷೀಕರಿಸಿಕೊಂಡಿದೆ.
ಭಾರತೀಯತೆ, ಹಿಂದುತ್ವದ ಪರ ಹೋರಾಡುವುದು ಭಾರತೀಯ ಜನತಾ ಪಾರ್ಟಿಯ ಪರಮ ಆದ್ಯತೆ, ಅದನ್ನು ಹತ್ತಿಕ್ಕಲು ಎಷ್ಟೇ ಪ್ರಯತ್ನಿಸಿದರು ಅದನ್ನು ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿಯ ಪ್ರತಿ ಕಾರ್ಯಕರ್ತರಿಗೂ ಇದೆ. ನಮ್ಮ ಪಕ್ಷದ ಪ್ರಮುಖರಾದ ಸಿ.ಟಿ ರವಿ ಅವರ ಮೇಲೆ ದಾಖಲಾಗಿರುವ FIR, ಹೋರಾಟದ ಒಂದು ಭಾಗವೆಂದು ನಾವು ಸ್ವೀಕರಿಸಿದ್ದೇವೆ, ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಜನರೇ ಧಿಕ್ಕರಿಸಲಿದ್ದಾರೆಂದು ಹೇಳಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ವಿರೋಧ ಪಕ್ಷದ ನಾಯಕರ ಧ್ವನಿ ಅಡಗಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುತ್ತಿದೆ. ಈ ತರಹದ ದ್ವೇಷದ ರಾಜಕಾರಣ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿಲ್ಲ. ಸಿ. ಟಿ. ರವಿ ಅವರ ಮೇಲಿನ ಕೇಸ್ ಅನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಮದ್ದೂರಿನಲ್ಲಿ ಮುಸಲ್ಮಾನರೇ ಕಲ್ಲು ತೂರಾಟ ಮಾಡಿದ್ದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೇ ಒಪ್ಪಿಕೊಂಡಿದ್ದಾರೆಂದು ತಿಳಿಸಿದ್ದಾರೆ.
ಮದ್ದೂರಿನಲ್ಲಿ ಕಳೆದ ಭಾನುವಾರ ರಾತ್ರಿ ಗಣೇಶ ಅವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟ, ಕೋಮುದಳ್ಳುರಿಗೆ ಮತಾಂಧ ಮುಸ್ಲಿಂ ಕಿಡಿಗೇಡಿಗಳೇ ಕಾರಣ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಒಪ್ಪಿಕೊಂಡಿರುವುದು ಸ್ವಾಗತಾರ್ಹ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರೂ ಈ ಸತ್ಯಾಂಶವನ್ನ ಒಪ್ಪಿಕೊಳ್ಳುತ್ತಾರಾ ಅಥವಾ ಸತ್ಯ ಹೇಳಿದ್ದಕ್ಕೆ ಮಾಜಿ ಸಚಿವ ರಾಜಣ್ಣ ಅವರನ್ನು ಏಕಾಏಕಿ ಸಂಪುಟದಿಂದ ವಜಾ ಮಾಡಿದ ರೀತಿ ಚಲುವರಾಯಸ್ವಾಮಿ ಅವರನ್ನೂ ಸಂಪುಟದಿಂದ ವಜಾ ಮಾಡುತ್ತಾರಾ? ಎಂದು ವ್ಯಂಗ್ಯವಾಡಿದ್ದಾರೆ.
Advertisement