

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷ ವಿರೋಧಿ ಚಟುವಟಿಕೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.
ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪಗಳ ಹಿನ್ನಲೆಯಲ್ಲಿ ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದು, ಇದೀಗ ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಂಗೀಕರಿಸಿದ್ದಾರೆ.
ಇನ್ನೂ ಅಚ್ಚರಿ ಎಂದರೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ (KPCC Minority Department) ವಿಸರ್ಜಿಸಿ ಕಾಂಗ್ರೆಸ್ ಆದೇಶ ಹೊರಡಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್ನಲ್ಲಿ ಭಾರೀ ಸಂಚನಲನ ಮೂಡಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ INC Karnataka, 'ಕೆಪಿಸಿಸಿ ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷ ಸ್ಥಾನಕ್ಕೆ ಕೆ. ಅಬ್ದುಲ್ ಜಬ್ಬಾರ್ ಅವರು ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಇಲಾಖೆಯ ಅಡಿಯಲ್ಲಿ ರಾಜ್ಯ, ಜಿಲ್ಲಾ ಮತ್ತು ವಿಧಾನಸಭೆ/ಬ್ಲಾಕ್ ಮಟ್ಟದಲ್ಲಿ ರಚಿಸಲಾದ ಎಲ್ಲಾ ಸಮಿತಿಗಳನ್ನು ವಿಸರ್ಜಿಸಲಾಗಿದೆ. ಸಂಘಟನೆ ಮತ್ತು ಪಾಲುದಾರರೊಂದಿಗೆ ಸೂಕ್ತ ಸಮಾಲೋಚನೆಯ ನಂತರ, ಸಾಧ್ಯವಾದಷ್ಟು ಬೇಗ ಹೊಸ ಸಮಿತಿಯನ್ನು ರಚಿಸಲಾಗುವುದು' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ರಾಜೀನಾಮೆ ಪರ್ವ, ಘಟಕವೇ ವಿಸರ್ಜನೆ
ಇದೇ ವೇಳೆ ಅಬ್ದುಲ್ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ರಾಜೀನಾಮೆ ಪರ್ವ ಕೂಡ ಆರಂಭವಾಗಿದ್ದು, ಮಹಮ್ಮದ್ ಸಿರಾಜ್ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಹಾಗೂ ವಕ್ಫ ಮಂಡಳಿ ಮಾಜಿ ಅಧ್ಯಕ್ಷ. ಇನ್ನೂ ಮೂರು ಜನ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್, ಹುಸೇನ್ ಉಕ್ಕಡಗಾತ್ರಿ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಡಿಕೆ ಶಿವಕುಮಾರ್ ಇಡೀ ಅಲ್ಪಸಂಖ್ಯಾತರ ಘಟಕವನ್ನೇ ವಿಸರ್ಜನೆ ಮಾಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ, ನಾಯಕರ ತಲೆತಂಡಕ್ಕೆ ಹೈ ಮುಂದು
ದಾವಣಗೆರೆ ದಕ್ಷಿಣ ಉಪಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗದವರ ತಲೆತಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಈಗಾಗಲೇ ಕೆಪಿಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ತಲೆದಂಡಕ್ಕೂ ಹೈಕಮಾಂಡ್ ಮುಂದಾಗಿದೆ. ಈ ಸಾಲಿನಲ್ಲಿ ಜಮೀರ್ ಅಹಮ್ಮದ್ ಖಾನ್ ಇದ್ದು, ಅವರ ಸಚಿವ ಸ್ಥಾನಕ್ಕೂ ಕುತ್ತು ಬಂದಿದೆ. ಈ ಎಲ್ಲಾ ಬೆಳವಣಿಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದು ಅಚ್ಚರಿಗೆ ಕಾರಣವಾಗಿದೆ.
Advertisement