

ಬೆಳಗಾವಿ: ನಾನು ಬಿಜೆಪಿಗೆ ಬರುತ್ತೇನೆ ಎಂದು ಯಾರು ಹೇಳುತ್ತಿದ್ದಾರೋ, ಅವರೇ ಬಿಜೆಪಿಯಲ್ಲಿ ಬಹಳ ದಿನ ಇರುವುದಿಲ್ಲ. ಶೀಘ್ರದಲ್ಲೇ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳುವ ಮೂಲಕ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಪರೋಕ್ಷವಾಗಿ ತಿರುಗೇಟು ಕೊಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ, ದುರುದ್ದೇಶದಿಂದ ಕೆಲವರು ಕೆಲಸ ಇಲ್ಲದ್ದಕ್ಕೇ ಏನೇನೋ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳುವುದಿಲ್ಲ. ಅವರೇ ಬೇರೆ ಪಕ್ಷಕ್ಕೆ ಹೋಗುವ ಚಿಂತೆಯಲ್ಲಿದ್ದಾರೆ. ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಹೀಗಿರುವಾಗ ನನ್ನ ಬಗ್ಗೆ ಅನುಮಾನಗಳೇಕೆ ಎಂದು ಪ್ರಶ್ನಿಸಿದರು.
ಕೆಲವರು ಕೆಲಸ ಇಲ್ಲದ್ದಕ್ಕೆ ತಲೆಬುಡ ಇಲ್ಲದ ಚರ್ಚೆ ಮಾಡುತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ನಾನು ಉತ್ತರಿಸುವ ಅವಶ್ಯಕತೆ ಇಲ್ಲ. ನನಗೆ ಮೈತುಂಬಾ ಕೆಲಸಗಳಿವೆ. ನನ್ನ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಬೇಕಿದೆ. ಹೀಗಾಗಿ ಬೇರೆಯವರು ಆಡುವ ಮಾತುಗಳಿಗೆ, ಆರೋಪಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಶಾಸಕರು ದೆಹಲಿ ಪ್ರವಾಸ ಕೈಗೊಂಡಿದ್ದು, ನೀವು ದೆಹಲಿಗೆ ಹೋಗುತ್ತಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗೆ ಇಲ್ಲಿಯವರೆಗೆ ದೆಹಲಿಯಿಂದ ಯಾವುದೇ ರೀತಿ ಬುಲಾವ್ ಅಥವಾ ಕರೆ ಬಂದಿಲ್ಲ. ಕರೆ ಬಂದ ಸಂದರ್ಭದಲ್ಲಿ ನಿಮಗೆ ಹೇಳಿಯೇ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದರು.
ನಾಳೆ ನನ್ನ ಕ್ಷೇತ್ರದಲ್ಲಿ ಕುಡಿಯುವ ನೀರು ಸೇರಿ ಅನೇಕ ಕಾಮಗಾರಿಗಳಿಗೆ ಭೂಮಿ ಪೂಜೆ ಕೆಲಸ ಇದೆ. ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ದೆಹಲಿಗೆ ಹೋಗುತ್ತಿಲ್ಲ. ಅಂತಿಮವಾಗಿ ಎಲ್ಲವನ್ನೂ ವರಿಷ್ಠರು, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು, ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಯಾವುದೇ ಗೊಂದಲ ಇಲ್ಲ. ಎಲ್ಲಾ ಗೊಂದಲಗಳಿಗೆ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
Advertisement