

ಬೆಂಗಳೂರು: ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಗಳ ಬಗ್ಗೆ ಜಗಳವಾಡುವುದು ಅನಾವಶ್ಯಕ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು.
ಕಾಂಗ್ರೆಸ್ ನೀಡಿದ್ದ 6-6-5 ಅನುಪಾತದ ಭರವಸೆಯನ್ನು ನ್ಯಾಯಾಲಯವು ಶೇ.15ಕ್ಕೆ ಮಿತಿಗೊಳಿಸಿದರೂ, ಅದರಲ್ಲಿ ಎಲ್ಲಾ ಹಿಂದುಳಿದ ವರ್ಗಗಳಿಗೂ ಲಾಭ ಸಿಗುತ್ತಿದೆ ಎಂದು ಹೇಳಿದರು.
ಸಣ್ಣ ಪ್ರಮಾಣದ ವ್ಯತ್ಯಾಸಗಳಿಗಾಗಿ ಜಗಳವಾಡುವ ಅಗತ್ಯವಿಲ್ಲ. ಮೀಸಲಾತಿ ಅವಧಿಯನ್ನು 10 ವರ್ಷಗಳ ಮಿತಿಯಾಚೆಯೂ ಮುಂದುವರಿಸಿರುವುದು ಲಕ್ಷಾಂತರ ಜನರಿಗೆ ಪ್ರಯೋಜನ ತಂದಿದೆ ಎಂದು ತಿಳಿಸಿದರು.
ಮೀಸಲಾತಿ ಕಾಂಗ್ರೆಸ್ನ ಮೂಲ ಕಾರ್ಯಕ್ರಮವಾಗಿದ್ದು, ಅದು ಸಮಾಜದಲ್ಲಿ ಗೌರವ ಮತ್ತು ಸ್ವಾಭಿಮಾನವನ್ನು ಒದಗಿಸಲು ರೂಪಿಸಲಾಗಿದೆ. ಕೇಂದ್ರ ಸರ್ಕಾರವು ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ರೂ.80,000 ಕೋಟಿ ನೀಡಿದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮಾತ್ರ STP ಮತ್ತು TSP ಕಾಯ್ದೆಗಳಡಿ ರೂ.29,000 ಕೋಟಿ ಅನುದಾನ ನೀಡಿದೆ ಎಂದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಳ ಮೀಸಲಾತಿ ಬಗ್ಗೆ ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ. ಈ ದಿಕ್ಕಿನಲ್ಲಿ ಕ್ರಮ ತೆಗೆದುಕೊಂಡಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ ಎಂದು ಹೇಳಿದರು.
ಮಹಿಳಾ ಮೀಸಲಾತಿ ವಿಷಯದಲ್ಲಿಯೂ ಕಾಂಗ್ರೆಸ್ ಪಾತ್ರವನ್ನು ಉಲ್ಲೇಖಿಸಿದ ಅವರು, ಗ್ರಾಮ ಪಂಚಾಯತ್ ಕಾಯ್ದೆಯಡಿ ಶೇ.50ರಷ್ಟು ಮೀಸಲಾತಿ ಜಾರಿಗೆ ತಂದಿರುವುದು ಕಾಂಗ್ರೆಸ್ ಸಾಧನೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರು ರಾಜಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದರಿಂದ ಮಹಿಳೆಯರಿಗೆ ನಾಯಕತ್ವದ ಅವಕಾಶ ಸಿಕ್ಕಿತು ಎಂದು ಹೇಳಿದರು.
ಇತಿಹಾಸ ಮರೆತವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಮಹಾತ್ಮ ಗಾಂಧಿ ಅವರಿಗೆ ಹೋಲಿಸಿ, ಇಬ್ಬರೂ ದೇಶದ ಮಹಾನ್ ನಾಯಕರು ಎಂದು ಕೊಂಡಾಡಿದರು. ಅಂಬೇಡ್ಕರ್ ಯಾವುದೇ ಒಂದು ಜಾತಿಗೆ ಸೀಮಿತವಲ್ಲ, ಅವರು ಇಡೀ ದೇಶಕ್ಕೆ ಸೇರಿದವರು ಎಂದರು.
Advertisement