ದಾವಣಗೆರೆ ದಕ್ಷಿಣ ಕಿಚ್ಚು: ಸಚಿವ ಜಮೀರ್ ತಲೆ ಮೇಲೆ ತೂಗು ಕತ್ತಿ, ನೆರವಾಗುತ್ತದೆಯೇ ಕೇರಳ ಪ್ರಚಾರ..?

ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಪಕ್ಷ ಈಗಾಗಲೇ ನಾಜೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿದ್ದು, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.
siddaramaiah and minister Zameer
ಸಿದ್ದರಾಮಯ್ಯ, ಜಮೀರ್ ಅಹ್ಮದ್
Updated on

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಲ್ಪಸಂಖ್ಯಾತ ನಾಯಕರ ನಡುವಿನ ‘ದಂಗಲ್‌’ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮೇಲೆಯೂ ತೂಗು ಕತ್ತಿ ನೇತಾಡುತ್ತಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಿದ ಆರೋಪಗಳು ಜಮೀರ್ ವಿರುದ್ಧ ಕೇಳಿಬಂದಿದ್ದು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಂದು ಪರಿಗಣಿಸಲ್ಪಡುವ ಜಮೀರ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆ ಪಕ್ಷದೊಳಗೂ, ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಪಕ್ಷ ಈಗಾಗಲೇ ನಾಜೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿದ್ದು, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಈ ಕ್ರಮಗಳಿಂದ ಅಲ್ಪಸಂಖ್ಯಾತ ಸಮುದಾಯದೊಳಗೆ ಗೊಂದಲ ಮತ್ತು ಅಸಮಾಧಾನ ಹೆಚ್ಚಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು, ಸಿದ್ದರಾಮಯ್ಯ ಅವರು ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿದ್ದಾರೆಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅವರು ಅಹಿಂದಾ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ದಲಿತರು) ರಾಜಕೀಯದ ಪ್ರಮುಖ ಮುಖವಾಗಿರುವುದರಿಂದ, ಈ ಸಮುದಾಯಗಳ ಮನಸ್ಸಿಗೆ ನೋವುಂಟಾಗದಂತೆ ನೋಡಿಕೊಳ್ಳುವುದು ಅವರಿಗೆ ಮುಖ್ಯವಾಗಿದೆ.

ಇದೇ ಕಾರಣಕ್ಕೆ ಜಮೀರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವುದನ್ನು ತಡೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

siddaramaiah and minister Zameer
ನಾನೇನು ಕೇರಳದಲ್ಲಿ ಮೋಜು- ಮಸ್ತಿಗೆ ಹೋಗಿರಲಿಲ್ಲ: ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ; ಆಪ್ತರ ತಲೆದಂಡ- ಜಮೀರ್ ಕೆಂಡ!

ಈ ನಡುವೆ ಸಿಎಂ ಅವರು ತೋಟಗಾರಿಕಾ ಸಚಿವ ಎಸ್ಎಸ್. ಮಲ್ಲಿಕಾರ್ಜುನ, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನು ತಮ್ಮ ನಿವಾಸಕ್ಕೆ ಕರೆಯಿಸಿ ಮಹತ್ವದ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಜಮೀರ್ ವಿರುದ್ಧದ ಅಸಮಾಧಾನವನ್ನು ಶಮನಗೊಳಿಸುವುದು ಮತ್ತು ಪಕ್ಷದ ಒಳಒಗ್ಗಟ್ಟನ್ನು ಕಾಪಾಡುವ ಕುರಿತು ಚರ್ಚೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಜಮೀರ್ ವಿರುದ್ಧದ ಕ್ರಮದ ನಿರ್ಧಾರ ಮೇ 4ರಂದು ಪ್ರಕಟವಾಗುವ ಚುನಾವಣಾ ಫಲಿತಾಂಶಗಳ ಮೇಲೆ ಅವಲಂಬಿತವಾಗಿರಬಹುದು ಎಂದು ಹೇಳಲಾಗುತ್ತಿದೆ. ಫಲಿತಾಂಶಗಳು ಕಾಂಗ್ರೆಸ್‌ಗೆ ಅನುಕೂಲಕರವಾಗಿದ್ದರೆ, ಜಮೀರ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ, ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ United Democratic Front (ಯುಡಿಎಫ್) ಅಭ್ಯರ್ಥಿಗಳ ಪರ ಜಮೀರ್ ನಡೆಸಿದ ಭಾರೀ ಪ್ರಚಾರವೂ ಅವರಿಗೆ ಒಂದು ರೀತಿಯ ರಕ್ಷಾಕವಚವಾಗಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಪಕ್ಷದ ಹೈಕಮಾಂಡ್ ಸೂಚನೆಯಂತೆ ಅವರು ಕೇರಳದಲ್ಲಿ ತೀವ್ರ ಪ್ರಚಾರ ನಡೆಸಿದ್ದು, ಇದನ್ನು ತಮ್ಮ ಪರವಾಗಿ ಉಪಯೋಗಿಸಿಕೊಳ್ಳಲು ಯತ್ನಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಖಾನ್, “ನಾನು ಕೇರಳಕ್ಕೆ ಮನರಂಜನೆಗಾಗಿ ಹೋಗಿಲ್ಲ. ಪ್ರತಿದಿನ ಸುಮಾರು 350 ಕಿಲೋಮೀಟರ್ ಪ್ರಯಾಣಿಸಿ ಪ್ರಚಾರ ಮಾಡಿದ್ದೇನೆ. ಹೈಕಮಾಂಡ್ ಸೂಚನೆ ಅನುಸರಿಸಿ ಕೆಲಸ ಮಾಡಿದ್ದೇನೆ,” ಎಂದು ಹೇಳಿದ್ದಾರೆ. ಜೊತೆಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರನ್ನೂ ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com