ಕಾಂಗ್ರೆಸ್ ನಾಯಕರೇ ಗುರಿ, ED ದಾಳಿಗಳಲ್ಲಿ ಪಕ್ಷಪಾತ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಕಿಡಿ

ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರ ಇಂತಹ ದಾಳಿಗಳು ನಡೆಯುತ್ತಿವೆ. ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಕ್ರಮಗಳು ಕಾಣುತ್ತಿಲ್ಲ. ಇದರಿಂದ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುಂಡ್ಲುಪೇಟೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಅವರ ಪುತ್ರರು ಮತ್ತು ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ಮೊಮ್ಮಗನ ಮನೆಗಳ ಮೇಲೆ ನಡೆದ ಇಡಿ ದಾಳಿಗಳನ್ನು ಉಲ್ಲೇಖಿಸಿ, “ಇವು ಆಯ್ಕೆಮಾಡಿದ ಕ್ರಮಗಳಂತೆ ಕಾಣುತ್ತಿವೆ” ಎಂದು ಹೇಳಿದರು.

“ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರ ಇಂತಹ ದಾಳಿಗಳು ನಡೆಯುತ್ತಿವೆ. ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಕ್ರಮಗಳು ಕಾಣುತ್ತಿಲ್ಲ. ಇದರಿಂದ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ,” ಎಂದು ಸಿಎಂ ಟೀಕಿಸಿದರು.

ಇದನ್ನು ರಾಜಕೀಯ ಪ್ರೇರಿತ ಕ್ರಮ ಎಂದು ಪರೋಕ್ಷವಾಗಿ ಸೂಚಿಸಿದ ಅವರು, ಕೇಂದ್ರ ಸರ್ಕಾರ ತನ್ನ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ಆರೋಪವನ್ನು ಮಾಡಿದರು.

ಚಾಮರಾಜನಗರ ಭೇಟಿ ಕುರಿತು ಮಾತನಾಡಿ, “ನಾನು ಮೂಢನಂಬಿಕೆಗಳನ್ನು ನಂಬುವುದಿಲ್ಲ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ತಪ್ಪು. ನಾನು ಹಲವಾರು ಬಾರಿ ಅಲ್ಲಿಗೆ ಭೇಟಿ ನೀಡಿದ್ದೇನೆ,” ಎಂದು ಹೇಳಿದರು. ಇದೇ ವೇಳೆ ಹಿಂದಿನ ಹೇಳಿಕೆಯನ್ನು ಹಾಸ್ಯವಾಗಿ ಹೇಳಿದ್ದಾಗಿಯೂ ಸ್ಪಷ್ಟಪಡಿಸಿದರು.

CM Siddaramaiah
ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ತಂದಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ

ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ, “ಈ ಯೋಜನೆಗಳನ್ನು ವಿರೋಧಿಸಿದ್ದವರೇ ಈಗ ಅದೇ ಮಾದರಿಯ ಯೋಜನೆಗಳನ್ನು ಘೋಷಿಸುತ್ತಿದ್ದಾರೆ. ಬಡವರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಅಗತ್ಯವೆಂದು ಅವರಿಗೂ ಈಗ ಅರಿವಾಗಿದೆ,” ಎಂದರು.

ಆಯ್ಕೆ ಮಾಡಿ ಪರಿಹಾರ ನೀಡಲಾಗುತ್ತಿದೆ ಎಂಬ ಜೆಡಿಎಸ್ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿ, “ಎಲ್ಲ ಅರ್ಹ ಫಲಾನುಭವಿಗಳಿಗೆ ಸಮಾನವಾಗಿ ನೆರವು ನೀಡಲಾಗುತ್ತಿದೆ. ಯಾವುದೇ ದೂರು ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಹೇಳಿದರು.

ಮಹಿಳಾ ಮೀಸಲಾತಿ ವಿಷಯ ಕುರಿತು ಮಾತನಾಡಿ, ಮಹಿಳಾ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ವಿರೋಧದಲ್ಲಿಲ್ಲ, ಆದರೆ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಜೊತೆ ಜೋಡಿಸುವುದಕ್ಕೆ ವಿರೋಧವಿದೆ ಎಂದು ಅವರು ಪುನರುಚ್ಚರಿಸಿದರು.

ರಾಜೀವ್ ಗಾಂಧಿ ಅವಧಿಯಲ್ಲಿ 73ನೇ ಮತ್ತು 74ನೇ ಸಂವಿಧಾನ ತಿದ್ದುಪಡಿ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಜಾರಿಯಾದುದನ್ನು ಇದೇ ವೇಳೆ ನೆನಪಿಸಿದರು.

ತೃತೀಯ ಭಾಷೆಗೆ ಅಂಕಗಳನ್ನು ನೀಡುವ ವಿಷಯದ ಕುರಿತು ಮಾತನಾಡಿ, ಹಿಂದಿನ ವರ್ಷಗಳಂತೆ ಮೌಲ್ಯಮಾಪನ ಮಾಡಲು ಸೂಚಿಸಿದ ಹೈಕೋರ್ಟ್‌ನ ನಿರ್ದೇಶನಗಳನ್ನು ಸರ್ಕಾರ ಪಾಲಿಸುತ್ತದೆ ಎಂದು ಹೇಳಿದರು.

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮದ ಕುರಿತು ಪ್ರಶ್ನೆಗಳಿಗೆ ಉತ್ತರಿಸಿ, ಈ ವಿಷಯವನ್ನು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ನಂತರ ಅಲ್ಪಸಂಖ್ಯಾತ ನಾಯಕರು ಎತ್ತಿದ ಕಳವಳಗಳ ಕುರಿತು ಮಾತನಾಡಿ, ಅಲ್ಪಸಂಖ್ಯಾತ ಪ್ರತಿನಿಧಿಗಳ ಸಮ್ಮುಖದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ನಿರ್ಧಾರ ತೆಗೆದುಕೊಳ್ಳುವಾಗ ಎಲ್ಲರೂ ಇದ್ದರು. ನಂತರ ಆಕ್ಷೇಪಣೆಗಳನ್ನು ಎತ್ತಿದ್ದಾರೆಂದು ತಿಳಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com