

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕವನ್ನು ಆರ್ಥಿಕ ಸಂಕಷ್ಟದತ್ತ ತಳ್ಳುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶುಕ್ರವರ ಹೇಳಿದ್ದಾರೆ.
ಬಸವನಪುರ, ಗೆರಡಡ ಮತ್ತು ಕೆಂಚನಹಳ್ಳಿ ಗ್ರಾಮಗಳಲ್ಲಿರುವ ಶ್ರೀ ಮೇಲಣಕಟ್ಟೆ ಗಣಪತಿ ದೇವಸ್ಥಾನ ಮತ್ತು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಹೊಸ ಅಗ್ರಹಾರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನವನ್ನು ಉದ್ಘಾಟಿಸಿದ ಕುಮಾರಸ್ವಾಮಿ ಅವರು, ಬಳಿಕ ಬಸವನಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡಲಾಗುತ್ತಿದೆ. ಆದರೆ ಈ ಹಣವನ್ನು ಸರ್ಕಾರ ಹೇಗೆ ಸಂಗ್ರಹಿಸುತ್ತಿದೆ ಎಂಬುದನ್ನು ಜನರು ಪರಿಶೀಲಿಸಬೇಕು ಎಂದು ಹೇಳಿದರು.
“ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಕ್ಕಾಗಿ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ಸಾಲ ಪಡೆದಿದೆ. ಈಗಾಗಲೇ ರಾಜ್ಯದ ಒಟ್ಟು ಸಾಲ ರೂ.7.26 ಲಕ್ಷ ಕೋಟಿಗೆ ಏರಿದ್ದು, ಪ್ರತಿ ನಾಗರಿಕನ ಮೇಲೂ ಸುಮಾರು ರೂ.1 ಲಕ್ಷದಷ್ಟು ಸಾಲದ ಹೊರೆ ಬಿದ್ದಿದೆ ಎಂದು ಆರೋಪಿಸಿದರು.
ಈ ವಿಚಾರದಲ್ಲಿ ನಾನು ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲು ನಾವು ಸಿದ್ಧನಿದ್ದೇನೆ. ಅವರಿಗೆ ಧೈರ್ಯವಿದ್ದರೆ, ಮುಂದಕ್ಕೆ ಬರಲಿ ಎಂದು ಸವಾಲು ಹಾಕಿದರು.
ರಾಜ್ಯದ ಖಜಾನೆ ಮೇಲೆ ಈ ಯೋಜನೆಗಳಿಂದ ಭಾರೀ ಒತ್ತಡ ಉಂಟಾಗಿದೆ. ಸರ್ಕಾರಿ ನೌಕರರ ವೇತನವನ್ನು ಸಮಯಕ್ಕೆ ಪಾವತಿಸಲು ಕೂಡ ಸರ್ಕಾರ ಹೆಣಗಾಟ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲೂ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಿದೆ, ಅಲ್ಲಿ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದಿದ್ದು, ನಂತರ ರಾಜ್ಯದ ಹಣಕಾಸು ಸ್ಥಿತಿಯನ್ನು ದುರ್ಬಲಗೊಳಿಸಿದೆ. ಕರ್ನಾಟಕವೂ ಇದೇ ರೀತಿಯ ಬಿಕ್ಕಟ್ಟನ್ನು ಎದುರಿಸಬಹುದು ಎಂದು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ಶ್ರೀಲಂಕಾದ ಆರ್ಥಿಕ ಸಂಕಷ್ಟವನ್ನು ಉಲ್ಲೇಖಿಸಿದ ಕುಮಾರಸ್ವಾಮಿ ಅವರು, ಸರಿಯಾದ ಹಣಕಾಸು ನಿರ್ವಹಣೆ ಇಲ್ಲದಿದ್ದರೆ ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ನೀಡುವ ರೂ.2,000 ಸಹಾಯಧನವು ಕುಟುಂಬ ನಿರ್ವಹಣೆಗೆ ಸಾಕಾಗುತ್ತದೆಯೇ ಎಂಬ ಪ್ರಶ್ನೆಯನ್ನೂ ಎತ್ತಿದ ಅವರು, ಒಂದು ಕಡೆ ಹಣ ನೀಡುತ್ತಿರುವ ಸರ್ಕಾರ, ಮತ್ತೊಂದು ಕಡೆ ತೆರಿಗೆ ಮತ್ತು ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ ಎಂದು ಟೀಕಿಸಿದರು.
ನಂತರ ಕುಮಾರಸ್ವಾಮಿಯವರು ಹೊಸ ಅಗ್ರಹಾರದಲ್ಲಿನ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಗೋಪುರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಲಿಗ್ರಾಮದ ಯೋಗ ನರಸಿಂಹಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿದರು.
Advertisement