

ಬೆಂಗಳೂರು: ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮದಿಂದ ಯಾವುದೇ ಸಮುದಾಯಕ್ಕೂ ಲಾಭವಾಗುವುದಿಲ್ಲ ಎಂದು ಟೀಕಿಸಿದರು.
ಒಂದು ಕಡೆ ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಈ ಎರಡೂ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ರೀತಿಯ ನಾಟಕ ಮಾಡುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 17 ಶೇಕಡಾ ಮೀಸಲಾತಿ ನೀಡಲಾಗಿತ್ತು. ಆದರೆ, ಈಗ ಅದನ್ನು 15 ಶೇಕಡಾಗೆ ಇಳಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಸಮರ್ಥಿಸುವ ಬದಲು ಸರ್ಕಾರ ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದೆ ಎಂದು ಆರೋಪಿಸಿದರು. ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ನ್ಯಾಯ ದೊರಕಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ, 52 ಜಾತಿಗಳ ಪ್ರತಿನಿಧಿಗಳು ಮತ್ತು ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸದೇ ಸರ್ಕಾರ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಎಲ್ಲ ಸಮುದಾಯಗಳ ಅಭಿಪ್ರಾಯ ಪಡೆದು ಬಳಿಕವೇ ಈ ರೀತಿಯ ನಿರ್ಧಾರ ಕೈಗೊಳ್ಳಬೇಕಿತ್ತು ಎಂದು ಒತ್ತಾಯಿಸಿದರು.
ಅಲ್ಲದೆ, ಒಳ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ ಅಶೋಕ್ ಅವರು, ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಒಗ್ಗೂಡಬಹುದು, ಆದರೆ ಸಮುದಾಯದ ಜನರು ನ್ಯಾಯಕ್ಕಾಗಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.
Advertisement