

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆಗಳು ಜೋರಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಮಾಜಿ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆ ಮತ್ತಷ್ಟು ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಅಚ್ಚರಿಯ ಹೇಳಿಕೆಗಳನ್ನ ನೀಡಿರುವ ಕೆಎನ್ ರಾಜಣ್ಣ, ಈ ಹಿಂದೆ ಇದ್ದ ಸಿದ್ದರಾಮಯ್ಯ ಅಂದರೆ 2013-2018 ರ ಅವಧಿಯಲ್ಲಿದ್ದ ಸಿದ್ದರಾಮಯ್ಯ ಈಗ ಇಲ್ಲ. ಈಗ ಸಿದ್ದರಾಮಯ್ಯ ರಾಹುಲ್ ಗಾಂಧಿ ಹೇಳಿದಂತೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಚಿವ ರಾಜಣ್ಣ ಈ ಹಿಂದೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದು, ಯಾರೋ ಮಾಟ-ಮಂತ್ರ ಮಾಡಿಸಿರಬೇಕು ಎಂದು ಹೇಳುವ ಮೂಲಕ ಸುದ್ದಿಯಾಗಿದ್ದರು. ಈಗ ಸಿದ್ದರಾಮಯ್ಯ ಈ ಹಿಂದೆ ಇದ್ದಂತೆ ಇಲ್ಲ. ಸಿಎಂ ಕುರ್ಚಿ ಬಿಡೋಕು ಸಿದ್ದರಾಮಯ್ಯ ರೆಡಿಯಾಗಿದ್ದಾರೆ ಎನ್ನುವ ಅಚ್ಚರಿಯ ಕೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಶಾಸಕ ಕೆ ಎನ್ ರಾಜಣ್ಣ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯೋಕು ಸಿದ್ಧರಾಗಿದ್ದು, ಅಧಿಕಾರ ಬಿಟ್ಟು ಕೊಡಲು ಕೂಡ ರೆಡಿಯಾಗಿದ್ದಾರೆ ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಅಧಿಕಾರ ಬದಲಾವಣೆಯ ವಿಷಯವಾಗಿ ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು ಎಂದು ಆಗ್ರಹಿಸಿರುವ ರಾಜಣ್ಣ, ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ದರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ ಪಕ್ಷ ಹಾಗೂ ರಾಜ್ಯದ ಜನತೆಯ ಭವಿಷ್ಯವೇ ಇದರಲ್ಲಿದೆ ಎಂದು ಹೇಳಿದ್ದಾರೆ.
ಹೀಗಾಗಿ ಹೈಕಮಾಂಡ್ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ. ರಾಹುಲ್ ಗಾಂಧಿ ಹೇಳಿದ್ದನ್ನು ಪಾಲನೆ ಮಾಡುತ್ತೇನೆ, ಆಗಲೂ ನಿಮ್ಮೆಲ್ಲರ ಸಹಕಾರ ಇರಬೇಕು ಎಂದು ಸಿಎಂ ಹೇಳಿದ್ದಾರೆ. ರಾಹುಲ್ ಗಾಂಧಿ ಏನು ತೀರ್ಮಾನ ಕೊಡ್ತಾರೆ ಅದರಂತೆ ನಡೆಯೋಣ ಎಂಬ ನಿರ್ಧಾರಕ್ಕೆ ಸಿದ್ದರಾಮಯ್ಯ ಬಂದಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.
ಅಧಿಕಾರ ಶಾಶ್ವತವಲ್ಲ, ಅಧಿಕಾರ ಕಳೆದುಕೊಂಡವರು ಮತ್ತೆ ಗಳಿಸ್ತಾರೆ. ರಾಹುಲ್ ನಿರ್ದೇಶನದಂತೆ ಹೋಗಬೇಕು ಎನ್ನುವುದು ಮುಖ್ಯಮಂತ್ರಿಗಳ ಮನಸ್ಥಿತಿಯಾಗಿದೆ. ಆದರೆ ಸಿದ್ದರಾಮಯ್ಯ ಅವರೇ ಮುಂದುವರೆಯಬೇಕು ಅನ್ನೋದು ನಮ್ಮ ಅಭಿಪ್ರಾಯ. ಇದನ್ನೇ ನಾವೆಲ್ಲಾ ಹೈಕಮಾಂಡ್ಗೂ ಹೇಳಿದ್ದೇವೆ ಎಂದು ರಾಜಣ್ಣ ತಿಳಿಸಿದ್ದಾರೆ.
Advertisement