

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವದಂತಿಗೆ ಹೈಕಮಾಂಡ್ ತೆರೆ ಎಳೆದಂತಾಗಿದೆ.
ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳಿರುವುದು ನಿಜ, ಅದು ಶೀಘ್ರವೇ ಬಗೆಹರಿಯಲಿದೆ. ನಾನು ಸಿಎಂ ಆಗಬೇಕೆಂದು ಕೆಲವರು ಹೇಳುತ್ತಾರೆ, ನೀವು ಮಾಧ್ಯಮದವರು ಕೂಡ ಆಗಾಗ ಆ ವಿಷಯ ಬಗ್ಗೆ ಮಾತನಾಡುತ್ತಿರುತ್ತೀರಿ, ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ದುಡಿಮೆ ಮುಖ್ಯ ಎಂದರು.
ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ
ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, ನೀವು ಹೇಳುತ್ತೀರಿ, ಮೇಲಿನವರೂ ಹೇಳುತ್ತಾರೆ, ಆದರೆ ನಮ್ಮ ಸಿದ್ಧಾಂತ ಪ್ರಕಾರ ನಿರ್ಣಯಗಳು ಹೆಚ್ಚಾಗಿ ಸೋನಿಯಾ ಗಾಂಧಿಯವರು ತೆಗೆದುಕೊಳ್ಳುತ್ತಾರೆ ಎಂದರು.
ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಉಪ ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಕಳೆದೊಂದು ವಾರದಿಂದ ಚಟುವಟಿಕೆ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಬಣದ ಸಚಿವರು, ಶಾಸಕರು ಹೇಳಿಕೆಗಳನ್ನು ನೀಡುತ್ತಾ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಮೇ 15ರೊಳಗೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್ ಗಿಫ್ಟ್ ನೀಡುತ್ತದೆ ಎಂದು ಆಸೆಪಟ್ಟವರಿಗೆ ತಣ್ಣೀರೆರಚಿದಂತಾಗಿದೆ.
Advertisement