

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವದಂತಿಗೆ ಹೈಕಮಾಂಡ್ ತೆರೆ ಎಳೆದಂತಾಗಿದೆ.
ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳಿರುವುದು ನಿಜ, ಅದು ಶೀಘ್ರವೇ ಬಗೆಹರಿಯಲಿದೆ ಎಂದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸ್ವಾಗತಿಸುತ್ತೇನೆ ಎಂದು ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲದಿರುವುದರಿಂದ ಅದು ಪ್ರಶ್ನೆಯೇ ಅಲ್ಲ ಎಂದರು.
ನಾನಾದರೆ ಉತ್ತಮ ಅಂತ ನೀವು ಹೇಳ್ತೀರಿ, ಅವರು ಹೇಳ್ತಾರೆ, ಮೇಲಿನವರು ಹೇಳ್ತಾರೆ. ಈಗಾಗಲೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರೆ. ಬದಲಾವಣೆ ಆಗಬೇಕೆಂದರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ನಾವು ಸೇರಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ, ನೋಡೋಣ ಎಂದರು.
ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ
ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.
ಬುಧವಾರ ಬೆಂಗಳೂರಿನಲ್ಲಿ ಮಳೆಯಿಂದ ಉಂಟಾದ ಘಟನೆಗಳಲ್ಲಿ 10 ಮಂದಿ ಮೃತಪಟ್ಟ ಬಗ್ಗೆ ಖರ್ಗೆ ದುಃಖ ವ್ಯಕ್ತಪಡಿಸಿದರು. ನಗರ ಪ್ರದೇಶಗಳಲ್ಲಿನ ರಸ್ತೆ ಬದಿ ವ್ಯಾಪಾರಿಗಳ ಬಗ್ಗೆ ನಗರ ಪಾಲಿಕೆ ಅಧಿಕಾರಿಗಳು ಕಾಳಜಿ ವಹಿಸಿ, ಅವರ ವ್ಯವಹಾರಕ್ಕೆ ಸೂಕ್ತ ಸ್ಥಳವನ್ನು ಒದಗಿಸಬೇಕು ಎಂದು ಹೇಳಿದರು.
ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಉಪ ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಕಳೆದೊಂದು ವಾರದಿಂದ ಚಟುವಟಿಕೆ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಬಣದ ಸಚಿವರು, ಶಾಸಕರು ಹೇಳಿಕೆಗಳನ್ನು ನೀಡುತ್ತಾ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಮೇ 15ರೊಳಗೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್ ಗಿಫ್ಟ್ ನೀಡುತ್ತದೆ ಎಂದು ಆಸೆಪಟ್ಟವರಿಗೆ ತಣ್ಣೀರೆರಚಿದಂತಾಗಿದೆ.
Advertisement