ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಭಿನ್ನಮತದ ಭೀತಿ; ಸಚಿವರ ಪಟ್ಟಿ ಕೊನೆಯ ಕ್ಷಣದವರೆಗೂ ಗೌಪ್ಯ, ಅತೃಪ್ತರ ಮನವೊಲಿಕೆಗೆ ಹೈಕಮಾಂಡ್ ಕಸರತ್ತು..!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗುವ ಕೊನೆಯ ಕ್ಷಣದಲ್ಲಿ ಮಾತ್ರ ಈ ಅಧಿಕೃತ ಪಟ್ಟಿಯನ್ನು ಅವರ ಕೈಗೆ ನೀಡಲು ತೀರ್ಮಾನಿಸಲಾಗಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆಯ ಅಂತಿಮ ಕಸರತ್ತು ಮುಕ್ತಾಯ ಹಂತಕ್ಕೆ ತಲುಪಿದ್ದರೂ, ಭಿನ್ನಮತ ಮತ್ತು ಬಹಿರಂಗ ಬಂಡಾಯದ ಭೀತಿಯಿಂದಾಗಿ ಕಾಂಗ್ರೆಸ್ ಕೇಂದ್ರ ನಾಯಕತ್ವವು ನೂತನ ಸಚಿವರ ಪಟ್ಟಿಯನ್ನು ಅತ್ಯಂತ ಗೌಪ್ಯವಾಗಿಟ್ಟಿದೆ.

ಸಚಿವ ಸ್ಥಾನ ವಂಚಿತ ಶಾಸಕರಿಂದ ಸಾರ್ವಜನಿಕ ಆಕ್ರೋಶ ಅಥವಾ ಸಂಘಟಿತ ಪ್ರತಿಭಟನೆಗಳು ಎದುರಾಗುವುದನ್ನು ತಡೆಯಲು ಹೈಕಮಾಂಡ್ ಈ ತಂತ್ರ ರೂಪಿಸಿದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗುವ ಕೊನೆಯ ಕ್ಷಣದಲ್ಲಿ ಮಾತ್ರ ಈ ಅಧಿಕೃತ ಪಟ್ಟಿಯನ್ನು ಅವರ ಕೈಗೆ ನೀಡಲು ತೀರ್ಮಾನಿಸಲಾಗಿದೆ.

ಈ ನಡುವೆ ಪಕ್ಷದ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಅತೃಪ್ತರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವರ ಅಂತಿಮ ಪಟ್ಟಿಯನ್ನು ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯೊಳಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ.

ಬಳಿಕ ಅವರು ಅಧಿಕೃತವಾಗಿ ರಾಜ್ಯಪಾಲರಿಗೆ ಸಚಿವರ ಪಟ್ಟಿಯನ್ನು ಸಲ್ಲಿಸಲಿದ್ದಾರೆ. ಆದರೆ, ಎಲ್ಲ 20 ಖಾಲಿ ಸ್ಥಾನಗಳನ್ನು ಒಂದೇ ಹಂತದಲ್ಲಿ ಭರ್ತಿ ಮಾಡಲಾಗುತ್ತದೆಯೇ ಅಥವಾ ಕೆಲವು ಸ್ಥಾನಗಳನ್ನು ಖಾಲಿ ಉಳಿಸಿ, ಅತೃಪ್ತ ಗುಂಪುಗಳನ್ನು ಸಮಾಧಾನಪಡಿಸಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

File photo
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್ ಹಂತಕ್ಕೆ: ನೂತನ ಸಚಿವರ ಪರಿಷ್ಕೃತ ಪಟ್ಟಿ ಹೈಕಮಾಂಡ್ ಬಳಿ; ಸಿಎಂ-ಮಾಜಿ ಸಿಎಂ ಬೆಂಗಳೂರಿಗೆ ವಾಪಸ್? Video

ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಸುಳಿವು ಸಿಕ್ಕಿರುವ ಕೆಲ ಶಾಸಕರು ಈಗಾಗಲೇ ಪರಸ್ಪರ ಸಂಪರ್ಕದಲ್ಲಿದ್ದು, ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದೇ ವೇಳೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ದೆಹಲಿಗೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಆನೇಕಲ್ ಶಾಸಕ ಶಿವಣ್ಣ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಕುರಿತು ಅವರು ಲಾಬಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಶಿವಣ್ಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಅವರ ಆಪ್ತರೆಂದು ಹೇಳಲಾಗುತ್ತಿದೆ. ಆದರೆ, ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯಲಿದೆ ಎಂಬುದನ್ನು ಪ್ರಿಯಾಂಕ್ ಖರ್ಗೆ ದೃಢಪಡಿಸಿದ್ದಾರೆ.

ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

2016ರಲ್ಲಿ ಸಚಿವ ಸಂಪುಟ ಪುನಾರಚನೆ ವೇಳೆ ಶಾಸಕ ಎಂ. ಕೃಷ್ಣಪ್ಪ (ಲೇಔಟ್ ಕೃಷ್ಣಪ್ಪ) ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ಬಾರಿಯೂ ಲೇಔಟ್ ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಾ ಕೃಷ್ಣ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು, ಪಟ್ಟಿಯಲ್ಲಿ ಸ್ಥಾನ ಸಿಗದಿದ್ದರೆ ಅಸಮಾಧಾನ ಭುಗಿಲೆದ್ದರೂ ಅಚ್ಚರಿಯಿಲ್ಲ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com