

ಬೀದರ್: ಸಚಿವ ಸಂಪುಟ ವಿಸ್ತರಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, "ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಎಲ್ಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ಕೆಲವರಲ್ಲಿ ಹಾಗೂ ಅವರ ಬೆಂಬಲಿಗರಲ್ಲಿ ಅಸಮಾಧಾನ ವ್ಯಕ್ತವಾಗುವುದು ಸಹಜ. ಆದರೆ, ಅಂತಿಮ ನಿರ್ಧಾರ ಹೈಕಮಾಂಡ್ನದ್ದಾಗಿದ್ದು, ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
ಇದೇ ವೇಳೆ ಸಚಿವ ಸಂಪುಟದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, "ಹಿರಿಯರು, ಕಿರಿಯರು, ವಿವಿಧ ಸಮುದಾಯಗಳು ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡೇ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಎಲ್ಲರಿಗೂ ಒಂದೇ ವೇಳೆ ಅವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ಕೆಲವರನ್ನು ಕೈಬಿಡುವುದು ಅನಿವಾರ್ಯ" ಎಂದು ತಿಳಿಸಿದರು.
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದಿರುವ ಕುರಿತು ಪ್ರತಿಕ್ರಿಯಿಸಿ, "ಒಂದು ಸಚಿವ ಸ್ಥಾನವನ್ನು ಉದ್ದೇಶಪೂರ್ವಕವಾಗಿ ಖಾಲಿ ಇರಿಸಲಾಗಿದೆ. ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.
ಬಳಿಕ ಮಾಜಿ ಸಚಿವೆ ಗಾಯತ್ರಿ ಶಾಂತೇಗೌಡ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಯನ್ನು ತಳ್ಳಿಹಾಕಿದ ಯತೀಂದ್ರ ಅವರು, "ಅವರು ಅಸಮಾಧಾನ ವ್ಯಕ್ತಪಡಿಸಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ಹೆಸರನ್ನು ಪಟ್ಟಿಯಿಂದ ಏಕೆ ಕೈಬಿಟ್ಟರು ಎಂಬುದು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಅದೇ ವೇಳೆ, ಕುರುಬ ಸಮುದಾಯದ ಇಬ್ಬರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಕೆಲವರಿಗೆ ಸಚಿವ ಸ್ಥಾನ ಸಿಗದಿರಬಹುದು. ಆದರೆ, ಅವರಿಗೆ ನಿಗಮ-ಮಂಡಳಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
"ಸಚಿವ ಸಂಪುಟದಲ್ಲಿ ಕೇವಲ 34 ಸ್ಥಾನಗಳಿರುವುದರಿಂದ ಪ್ರಾದೇಶಿಕ, ಜಾತಿ ಹಾಗೂ ಸಮುದಾಯದ ಸಮತೋಲನದ ಜೊತೆಗೆ ಹೊಸಬರಿಗೂ ಅವಕಾಶ ನೀಡಬೇಕಾಗುತ್ತದೆ. ಯಾವುದೇ ಸರ್ಕಾರಕ್ಕೂ ಶೇ.100ರಷ್ಟು ಎಲ್ಲರಿಗೂ ಪ್ರಾತಿನಿಧ್ಯ ನೀಡಲು ಸಾಧ್ಯವಿಲ್ಲ" ಎಂದು ಹೇಳಿದರು.
ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾದರೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹೊಡೆತ ಬೀಳುವುದಿಲ್ಲ. ಪಕ್ಷ ಸಂಘಟನೆಯ ಆಧಾರದ ಮೇಲೆ ಮುಂದುವರಿಯುತ್ತದೆ ಎಂದು ಅಭಿಪ್ರಾಯಪಟ್ಟರು.