ಸಿದ್ದರಾಮಯ್ಯಗೆ ಯಾವುದೇ ಅಸಮಾಧಾನ ಇಲ್ಲ, ಸಚಿವ ಸ್ಥಾನ ಸಿಗದವರ ಪ್ರತಿಭಟನೆ ಸಹಜ; ಯತೀಂದ್ರ ಸ್ಪಷ್ಟನೆ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದಿರುವ ಕುರಿತು ಪ್ರತಿಕ್ರಿಯಿಸಿ, "ಒಂದು ಸಚಿವ ಸ್ಥಾನವನ್ನು ಉದ್ದೇಶಪೂರ್ವಕವಾಗಿ ಖಾಲಿ ಇರಿಸಲಾಗಿದೆ. ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
yathindra siddaramaiah
ಯತೀಂದ್ರ ಸಿದ್ದರಾಮಯ್ಯ
Updated on

ಬೀದರ್: ಸಚಿವ ಸಂಪುಟ ವಿಸ್ತರಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, "ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಎಲ್ಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿ ಕೆಲವರಲ್ಲಿ ಹಾಗೂ ಅವರ ಬೆಂಬಲಿಗರಲ್ಲಿ ಅಸಮಾಧಾನ ವ್ಯಕ್ತವಾಗುವುದು ಸಹಜ. ಆದರೆ, ಅಂತಿಮ ನಿರ್ಧಾರ ಹೈಕಮಾಂಡ್‌ನದ್ದಾಗಿದ್ದು, ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

ಇದೇ ವೇಳೆ ಸಚಿವ ಸಂಪುಟದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, "ಹಿರಿಯರು, ಕಿರಿಯರು, ವಿವಿಧ ಸಮುದಾಯಗಳು ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಂಡೇ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಎಲ್ಲರಿಗೂ ಒಂದೇ ವೇಳೆ ಅವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ಕೆಲವರನ್ನು ಕೈಬಿಡುವುದು ಅನಿವಾರ್ಯ" ಎಂದು ತಿಳಿಸಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದಿರುವ ಕುರಿತು ಪ್ರತಿಕ್ರಿಯಿಸಿ, "ಒಂದು ಸಚಿವ ಸ್ಥಾನವನ್ನು ಉದ್ದೇಶಪೂರ್ವಕವಾಗಿ ಖಾಲಿ ಇರಿಸಲಾಗಿದೆ. ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.

ಬಳಿಕ ಮಾಜಿ ಸಚಿವೆ ಗಾಯತ್ರಿ ಶಾಂತೇಗೌಡ ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿಯನ್ನು ತಳ್ಳಿಹಾಕಿದ ಯತೀಂದ್ರ ಅವರು, "ಅವರು ಅಸಮಾಧಾನ ವ್ಯಕ್ತಪಡಿಸಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ಹೆಸರನ್ನು ಪಟ್ಟಿಯಿಂದ ಏಕೆ ಕೈಬಿಟ್ಟರು ಎಂಬುದು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

yathindra siddaramaiah
ಅರ್ಹತೆಗಿಲ್ಲ ಆದ್ಯತೆ-ನೈತಿಕತೆಗಿಲ್ಲ ಬೆಲೆ, ಅನರ್ಹರಿಗೆ ಅಧಿಕಾರ ನೀಡುವುದೇ ಡಿಕೆಶಿ ಸರ್ಕಾರದ ಕೊತ್ವಾಲ್‌ ಮಾಡೆಲ್‌..!

ಅದೇ ವೇಳೆ, ಕುರುಬ ಸಮುದಾಯದ ಇಬ್ಬರು ಹಾಗೂ ಅಲ್ಪಸಂಖ್ಯಾತ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಕೆಲವರಿಗೆ ಸಚಿವ ಸ್ಥಾನ ಸಿಗದಿರಬಹುದು. ಆದರೆ, ಅವರಿಗೆ ನಿಗಮ-ಮಂಡಳಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

"ಸಚಿವ ಸಂಪುಟದಲ್ಲಿ ಕೇವಲ 34 ಸ್ಥಾನಗಳಿರುವುದರಿಂದ ಪ್ರಾದೇಶಿಕ, ಜಾತಿ ಹಾಗೂ ಸಮುದಾಯದ ಸಮತೋಲನದ ಜೊತೆಗೆ ಹೊಸಬರಿಗೂ ಅವಕಾಶ ನೀಡಬೇಕಾಗುತ್ತದೆ. ಯಾವುದೇ ಸರ್ಕಾರಕ್ಕೂ ಶೇ.100ರಷ್ಟು ಎಲ್ಲರಿಗೂ ಪ್ರಾತಿನಿಧ್ಯ ನೀಡಲು ಸಾಧ್ಯವಿಲ್ಲ" ಎಂದು ಹೇಳಿದರು.

ಸಿದ್ದರಾಮಯ್ಯ ರಾಜಕೀಯ ನಿವೃತ್ತಿಯಾದರೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹೊಡೆತ ಬೀಳುವುದಿಲ್ಲ. ಪಕ್ಷ ಸಂಘಟನೆಯ ಆಧಾರದ ಮೇಲೆ ಮುಂದುವರಿಯುತ್ತದೆ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com