

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಅಸಮಾಧಾನ ದಿನದಿಂದ ದಿನಕ್ಕೆ ಜೋರಾಗುತ್ತಿದೆಯೇ ಹೊರತು ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ.
ಆಗಸ್ಟ್ 3 ರಂದು ನಡೆದ ಹೈ-ವೋಲ್ಟೇಜ್ ಸಂಪುಟ ವಿಸ್ತರಣೆ ಈಗ ಕಾಂಗ್ರೆಸ್ ಹೈಕಮಾಂಡ್'ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಪರಿಸ್ಥಿತಿಯನ್ನು ನಿಯಂತ್ರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಸ್ವತಃ ಅಖಾಡಕ್ಕಿಳಿದಿದ್ದಾರೆ.
ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿದ ಬಳಿಕ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸಲು ವಿಶೇಷ ಸೂತ್ರವನ್ನು ಪ್ರಕಟಿಸಲು ಚಿಂತನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಲವು ಶಾಸಕರು ತಮ್ಮ ಅಸಮಾಧಾನವನ್ನು ನೇರವಾಗಿ ಸೂರ್ಜೇವಾಲಾ ಮುಂದೆ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಸಚಿವ ಸ್ಥಾನಕ್ಕೆ ಯಾರ್ಯಾರ ಹೆಸರುಗಳನ್ನು ಹೈಕಮಾಂಡ್ಗೆ ಕಳುಹಿಸಲಾಗಿತ್ತು ಹಾಗೂ ಕೊನೆಯ ಕ್ಷಣದಲ್ಲಿ ಏಕೆ ಕೆಲವರ ಹೆಸರು ಕೈಬಿಡಲಾಯಿತು ಎಂಬುದನ್ನು ಸೂರ್ಜೇವಾಲಾ ಶಾಸಕರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ವಂಚಿತರಾದ ನಾಯಕರಿಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಹುದ್ದೆಗಳು, ವಿವಿಧ ಮಂಡಳಿ ಹಾಗೂ ನಿಗಮಗಳ ಅಧ್ಯಕ್ಷ ಸ್ಥಾನಗಳನ್ನು ನೀಡುವ ಮೂಲಕ ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಅಹಿಂದ ವರ್ಗದ ಹಲವು ಶಾಸಕರು, ವಿಶೇಷವಾಗಿ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ನ್ಯಾಯ ಸಿಕ್ಕಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಸಮರ್ಪಕವಾಗಿ ಬೆಂಬಲಿಸಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ನಗರಾಭಿವೃದ್ಧಿ ಸಚಿವ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಈ ಆರೋಪವನ್ನು ತಳ್ಳಿ ಹಾಕಿದ್ದು, ಮಹದೇವಪ್ಪ ಅವರ ಹೆಸರೇ ತಮ್ಮ ತಂದೆ ಸಲ್ಲಿಸಿದ್ದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಡಾ. ಎಚ್.ಸಿ. ಮಹದೇವಪ್ಪ ಗುರುವಾರ ದೆಹಲಿಗೆ ತೆರಳಿದ್ದು, ಕಾಂಗ್ರೆಸ್ನ ಕೇಂದ್ರ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.
ಆರು ಬಾರಿ ಶಾಸಕರಾಗಿರುವ ಅಪ್ಪಾಜಿ ಸಿ.ಎಸ್. ನಾಡಗೌಡ ಕೂಡ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿಯಲ್ಲಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಚಿವರಾದ ಮಂಕಾಳು ವೈದ್ಯ, ಆರ್.ಬಿ. ತಿಮ್ಮಾಪುರ, ಎನ್.ಎಸ್. ಬೋಸರಾಜು, ರಹೀಂ ಖಾನ್ ಸೇರಿದಂತೆ ಹಲವು ಹಿರಿಯ ನಾಯಕರು ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿದ್ದಾರೆ. ಅಳಂದ ಶಾಸಕ ಬಿ.ಆರ್. ಪಾಟೀಲ್ ಕೂಡ ಈ ಪಟ್ಟಿಯಲ್ಲಿದ್ದಾರೆ.
ಈ ನಡುವೆ ಅಸಮಾಧಾನಿತ ಶಾಸಕರ ಒಂದು ತಂಡ ಆಗಸ್ಟ್ 13ರಂದು ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗುವ ದಿನ ರಾತ್ರಿ ಭೋಜನ ಕೂಟದಲ್ಲಿ ಸಭೆ ಸೇರಲು ತೀರ್ಮಾನಿಸಿದೆ ಎನ್ನಲಾಗಿದೆ.
ಮುಂದಿನ 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಪಕ್ಷದ ನಾಯಕತ್ವದ ಮುಂದೆ ಇಡುವ ಸಾಧ್ಯತೆ ಇದೆ.
ಈ ನಡುವೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್ ಬೆಂಬಲಿಗರು, ಬ್ಯಾಡಗಿಯಲ್ಲಿ ಬಸವರಾಜ ಶಿವಣ್ಣನವರ ಬೆಂಬಲಿಗರು, ಬಂಗಾರಪೇಟೆಯಲ್ಲಿ ಎಸ್.ಎನ್. ನಾರಾಯಣಸ್ವಾಮಿ ಬೆಂಬಲಿಗರು ಹಾಗೂ ಶ್ರೀರಂಗಪಟ್ಟಣದಲ್ಲಿ ರಮೇಶ್ ಬಂಡಿಸಿದ್ದೇಗೌಡ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುರುಬ ಸಮುದಾಯದ ನಾಯಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಸಿಗದಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ವೇಳೆ ಬಸವರಾಜ ರಾಯರೆಡ್ಡಿ ಅವರಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದರೂ, ಸಚಿವ ಸಂಪುಟ ವಿಸ್ತರಣೆಯ ಬಳಿಕ ಅವರು ಮೊದಲ ಬಾರಿಗೆ ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಿರೀಕ್ಷಿತ ಸ್ವಾಗತ ದೊರೆಯಲಿಲ್ಲ ಎನ್ನಲಾಗಿದೆ.
ಚಿಕ್ಕಮಗಳೂರು ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಅವರ ಹೆಸರು ಕೊನೆಯ ಕ್ಷಣದವರೆಗೂ ಸಂಭಾವ್ಯ ಸಚಿವರ ಪಟ್ಟಿಯಲ್ಲಿದ್ದರೂ ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಭಾವದಿಂದ ಗಾಯತ್ರಿ ಅವರ ಹೆಸರು ಕೊನೆಯ ಹಂತದವರೆಗೂ ಉಳಿದಿತ್ತು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.
ಇದೀಗ ಅಸಮಾಧಾನಗೊಂಡ ಶಾಸಕರನ್ನು ಹೈಕಮಾಂಡ್ ಯಾವ ರೀತಿಯಲ್ಲಿ ಸಮಾಧಾನಪಡಿಸಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ವಿಜಯನಗರ ಶಾಸಕ ಕೃಷ್ಣಪ್ಪ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆಯಾದರೂ, ತಾವು ಸಚಿವ ಸ್ಥಾನಕ್ಕಿಂತ ಕಡಿಮೆ ಹುದ್ದೆ ಸ್ವೀಕರಿಸುವುದಿಲ್ಲ ಎಂದು ಅವರು ಸೂರ್ಜೇವಾಲಾಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಕೆ.ಎಚ್. ಮುನಿಯಪ್ಪ ಅವರ ಪುತ್ರಿ ಹಾಗೂ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡುವ ಪ್ರಯತ್ನವೂ ನಡೆದಿತ್ತು ಎನ್ನಲಾಗಿದೆ. ಆದರೆ, ತಾವೇ ತಮ್ಮ ಅವಧಿಯನ್ನು ಪೂರ್ಣಗೊಳಿಸಿ, 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಪುತ್ರಿಗೆ ಸಚಿವ ಸ್ಥಾನ ನೀಡಬಹುದು ಎಂದು ಮುನಿಯಪ್ಪ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನ ಬದಲಾಗಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹುದ್ದೆ ನೀಡಲಾಗಿದೆ.
ಅವರೊಂದಿಗೆ ಕುಂಚಿಟಿಗ-ಒಕ್ಕಲಿಗ ಸಮುದಾಯದ ಧಾರ್ಮಿಕ ಮುಖಂಡ ಶ್ರೀ ನಂಜಾವಧೂತ ಅವರು ಗುರುವಾರ ಚರ್ಚೆ ನಡೆಸಿದ್ದಾರೆ. ಮಾಜಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಹ ಸೂರ್ಜೇವಾಲಾ ಭೇಟಿ ಮಾಡಿ ಅಸಮಾಧಾನ ಶಮನಕ್ಕೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ.
ಈಗ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರ ಹುದ್ದೆ ಯಾರಿಗೆ ಸಿಗಲಿದೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ. ಜೊತೆಗೆ ಸಚಿವ ಸಂಪುಟದಲ್ಲಿ ಇನ್ನೂ ಖಾಲಿ ಇರುವ ಒಂದು ಸ್ಥಾನ ಮಹಿಳಾ ಶಾಸಕರಿಗೆ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆಯೂ ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ.
ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದರೂ ಅಸಮಾಧಾನದ ಹೊಗೆ ಇನ್ನೂ ಸಂಪೂರ್ಣವಾಗಿ ತಣ್ಣಗಾಗದಿರುವುದು ಆಡಳಿತಾರೂಢ ಕಾಂಗ್ರೆಸ್ಗೆ ಹೊಸ ಸವಾಲಾಗಿ ಪರಿಣಮಿಸಿದೆ.