

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಸರ್ಕಾರ ತಮ್ಮ ಮೇಲೆ ಒತ್ತಡ ಹೇರಿತ್ತು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ.
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಆಗಸ್ಟ್ 14ರಂದು ವಿಧಾನ ಪರಿಷತ್ ಅಧಿವೇಶನವನ್ನು ಕರೆದು, ಸದನದ ಸದಸ್ಯರಿಗೆ ಕೃತಜ್ಞತೆ ಹಾಗೂ ಧನ್ಯವಾದ ಅರ್ಪಿಸಿದ ಬಳಿಕವೇ ರಾಜೀನಾಮೆ ನೀಡಲು ತಾವು ಉದ್ದೇಶಿಸಿದ್ದಾಗಿ ಹೊರಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ.
ಆದರೆ, ಆಗಸ್ಟ್ 7ರಂದೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಈ ಬೆಳವಣಿಗೆ ಅನಿರೀಕ್ಷಿತವಾಗಿತ್ತು. ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಯಿಂದ ತಮಗೆ ಆಶ್ಚರ್ಯವಾಯಿತು ಎಂದು ಹೊರಟ್ಟಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
75 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಬಹುಮತ ಹೊಂದಿರುವ ಹಿನ್ನೆಲೆಯಲ್ಲಿ, ಸಭಾಪತಿ ಸ್ಥಾನಕ್ಕೆ ಹಕ್ಕು ಮಂಡಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಸಂದರ್ಭದಲ್ಲೇ ರಾಜ್ಯಪಾಲರಿಗೆ ಹೊರಟ್ಟಿ ಬರೆದಿರುವ ಪತ್ರ ಮಹತ್ವ ಪಡೆದುಕೊಂಡಿದೆ.