

ನವದೆಹಲಿ: ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಗ್ರೀನ್ಸಿಗ್ನಲ್ ನೀಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳಿ, ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಮತ್ತು ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ.
ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರ ಅಸಮಾಧಾನ ತಣಿಸುವುದು ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ಸಿಎಂ ಡಿಕೆ ಶಿವಕುಮಾರ್ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.
ಸೋಮವಾರ ಸಂಜೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ಸಿಎಂ ಡಿಕೆ ಶಿವಕುಮಾರ್ ಅವರು, ವರಿಷ್ಠರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿ, ಪಟ್ಟಿ ನೀಡಿ ಬಂದಿದ್ದೇನೆ. ಅಧಿವೇಶನದೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದೆಹಲಿಯಿಂದ ಬರುತ್ತಿದ್ದಂತೆ ಮಾಲೂರಿನಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಖಾತೆ ಹಂಚಿಕೆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ. ಅಧಿವೇಶನದೊಳಗೆ ಖಾತೆ ಹಂಚಿಕೆ ಮಾಡಲಾಗುವುದು. ಬಳಿಕ ಉಳಿದ ಸಚಿವ ಸ್ಥಾನದ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಇದೇ ವೇಳೆ ಜೆಡಿಎಸ್ ಪಕ್ಷದ ಬಿಡದಿ ಟೌನ್ ಶಿಪ್ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, 'ರಾಜಕೀಯದ ಉಳಿವಿಗಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನೈಸ್ ಮತ್ತು ಬಿಡದಿ ಎರಡೂ ಯೋಜನೆಗೆ ಸಹಿ ಸಹಿ ಹಾಕಿದ್ದು ಯಾರು' ಎಂದು ಪ್ರಶ್ನಿಸಿದರು.
ಅವರು ಮಾಡಿದ ಯೋಜನೆಯನ್ನು ನಾವು ಮುಂದುವರಿಸಿದ್ದೇವೆ. ರೈತರು ಯಾರೂ ಇಲ್ಲ, ಹೊರಗಡೆ ಕ್ಷೇತ್ರದ ಕಾರ್ಯಕರ್ತರನ್ನು ತಂದು ಹೋರಾಟ ನಡೆಸುತ್ತಿದ್ದಾರೆ. ಅದು ಪ್ರಜಾಪ್ರಭುತ್ವದ ಹಕ್ಕು, ಬೇಡ ಎನ್ನಲು ಆಗಲ್ಲ ಎಂದು ಹೇಳಿದರು.
ನಾವು ಅವರು ಮಾಡಿದ ಯೋಜನೆಗಳನ್ನು ಮುಂದುವರಿಸಿದ್ದೇವೆ, ಅವರು ರೈತರಿಗೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ಹೇಳಿದರು. ನಾವು 2 ಕೋಟಿ ರೂ.ನಿಂದ 3 ಕೋಟಿ ಕೊಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.