

ಹಾಸನ: 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಬಾಕಿಯಿರುವಾಗಲೇ, ಹಾಸನ ಜಿಲ್ಲೆಯ ರಾಜಕೀಯ ಅಂಗಳದಲ್ಲಿ ಮರುಧ್ರುವೀಕರಣದ ಸುಳಿವುಗಳು ಸಿಗುತ್ತಿವೆ.
ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನದ ಮಾಜಿ ಶಾಸಕ ಪ್ರೀತಂ ಜೆ.ಗೌಡ ಒಂದೇ ವೇದಿಕೆ ಹಂಚಿಕೊಂಡು ಆತ್ಮೀಯವಾಗಿ ಮಾತುಕತೆ ನಡೆಸಿದ ಪ್ರಸಂಗ ಹಾಸನದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭದಲ್ಲಿ ಇಬ್ಬರು ಮುಖಂಡರೂ ಪಾಲ್ಗೊಂಡು ಅಕ್ಕಪಕ್ಕ ಕುಳಿತು ದೀರ್ಘಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು ಕಾರ್ಯಕ್ರಮದಲ್ಲಿ ಗಮನಸೆಳೆಯಿತು. ಅಷ್ಟೇ ಅಲ್ಲ. ಸಂಸದ ಶ್ರೇಯಸ್ ಪಟೇಲ್ ಅವರು ತಮ್ಮ ಭಾಷಣದಲ್ಲಿ ಪ್ರೀತಂ ಗೌಡ ಅವರ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು.
ಪ್ರೀತಂ ಗೌಡ ಅವರು ಹಾಸನ ಶಾಸಕರಾಗಿದ್ದ ಐದು ವರ್ಷಗಳ ಅವಧಿಯಲ್ಲಿ ಹಾಸನ ನಗರದ ಅಭಿವೃದ್ಧಿಗೆ ಶ್ರಮಿಸಿ ಜನ ಮೆಚ್ಚಿಗೆ ಪಡೆದಿದ್ದಾರೆ. ಪ್ರೀತಂ ಅಣ್ಣ ಅವರಿಗೆ ಮುಂದಿನ ದಿನಗಳಲ್ಲಿ ಶುಭವಾಗಲಿ ಎಂದು ಶ್ರೇಯಸ್ ಪಟೇಲ್ ಅವರು ಹಾರೈಸಿದರು.
ಜೆಡಿಎಸ್–ಬಿಜೆಪಿ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇರುವ ಆತಂಕದಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಇದ್ದಾರೆ. ಹೀಗಾಗಿ ಅವರು ಸ್ಥಳೀಯವಾಗಿ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಜೊತೆ ಪಿಸು ಪಿಸು ಮಾತನಾಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕುಟುಂಬದ ರಾಜಕೀಯ ಕಡುವೈರಿಯಾಗಿರುವ ಪ್ರೀತಂ ಗೌಡ, 2023 ರ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಕೆಲ ಕಾಲ ಸೈಲೆಂಟ್ ಆಗಿದ್ದರು. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶ್ರೇಯಸ್ ಪಟೇಲ್ ಅವರಿಗೆ ಪರೋಕ್ಷವಾಗಿ ಬೆಂಬಲ ನೀಡಿದ್ದರು ಎಂಬ ಮಾತುಗಳಿವೆ.