

ಕೊಪ್ಪಳ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಾನು ಆರೋಪಿ ಅಷ್ಟೇ, ಅಪರಾಧಿ ಅಲ್ಲ. ಕಾನೂನು ಹೋರಾಟ ನಡೆಸುತ್ತಿದ್ದೇನೆ. ನ್ಯಾಯಾಲಯದಿಂದ ನಿರಪರಾಧಿಯಾಗಿ ಹೊರ ಬರುತ್ತೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಮಂಗಳವಾರ ಹೇಳಿದ್ದಾರೆ.
ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಕಳಂಕಿತ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ನಾವು ವಿಧಾನಸಭೆ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿವೆ.
ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಂದ್ರ ಅವರು, ಬಿಜೆಪಿ ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ ನಾಗೇಂದ್ರ, ಈ ಸಂಬಂಧ ಕಾನೂನು ಹೋರಾಟ ನಡೆಸುತ್ತಿದ್ದು, ತಾವು ನಿರಪರಾಧಿ ಎಂಬುದನ್ನು ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಹೇಳಿದರು.
‘ನಾನು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎನ್ನುವುದು ಬಿಜೆಪಿಯವರ ಕೆಲಸ. ಅವರು ಅವರ ಕೆಲಸ ಮಾಡಲಿ, ನಾನು ನನ್ನ ಕೆಲಸ ಮಾಡುತ್ತೇನೆ. ಸದನದಲ್ಲಿ ಬಿಜೆಪಿಯವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ ಎಂದು ನಾಗೇಂದ್ರ ತಿರುಗೇಟು ನೀಡಿದರು.
ನಾನೀಗ ಪೆಟ್ಟು ತಿಂದ ಹುಲಿಯಂತಾಗಿದ್ದೇನೆ
ಇದೇ ವೇಳೆ ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ನಾಗೇಂದ್ರ ಅವರು, ಹೈಕಮಾಂಡ್ ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದರು. ಅಲ್ಲದೆ ‘ನಾನೀಗ ಪೆಟ್ಟು ತಿಂದ ಹುಲಿಯಂತಾಗಿದ್ದೇನೆ. ಈ ಬಾರಿ ಯಾವುದೇ ಖಾತೆ ನೀಡಿದರೂ ಅತ್ಯಂತ ಜವಾಬ್ದಾರಿಯಿಂದ, ಜನರು ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.