

ಬೆಂಗಳೂರು: ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಕಾರ್ಯಚಟುವಟಿಕೆಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸಂಬಂಧ ರಾಜ್ಯ ಸರ್ಕಾರ0 ಪ್ರತ್ಯೇಕ ಮಸೂದೆ ರೂಪಿಸಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ಗೆ ಕಡಿವಾಣ ಹಾಕಲು ಈ ಮಸೂದೆ ತರಲಾಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ಆಗಸ್ಟ್ 13 ರಂದು ರಾಜ್ಯ ಸಚಿವ ಸಂಪುಟ ಈ ಮಸೂದೆಗೆ ಅನುಮೋದನೆ ನೀಡಿದ್ದು. ಈ ಸಂಬಂಧ ಶುಕ್ರವಾರ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆವರಣಗಳ ಬಳಕೆಯನ್ನು ನಿಯಂತ್ರಿಸುವ ಗುರಿಯನ್ನು ಈ ಮಸೂದೆ ಹೊಂದಿದೆ ಮತ್ತು ವಿವಿಧ ಚಟುವಟಿಕೆಗಳನ್ನು ನಡೆಸಲು ಸರ್ಕಾರದಿಂದ ಪೂರ್ವಾನುಮತಿ ಕಡ್ಡಾಯಗೊಳಿಸುತ್ತದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ವನ್ನು ಗುರಿಯಾಗಿಸಿ ಈ ಮಸೂದೆ ಮಂಡಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರೂ, ಯಾವುದೇ ಸಂಘಟನೆಯ ಹೆಸರನ್ನು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಕಳೆದ ವರ್ಷ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಪತ್ರ ಬರೆದಿದ್ದರು.
"ಆರ್ಎಸ್ಎಸ್ ಎಂಬ ಸಂಘಟನೆಯು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಮೈದಾನಗಳಲ್ಲಿ ತನ್ನ ಶಾಖೆಗಳನ್ನು ನಡೆಸುತ್ತಿದೆ. ಅಲ್ಲಿ ಘೋಷಣೆಗಳನ್ನು ಕೂಗಲಾಗುತ್ತದೆ ಮತ್ತು ಮಕ್ಕಳು ಹಾಗೂ ಯುವಕರ ಮನಸ್ಸಿನಲ್ಲಿ ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತದೆ" ಎಂದು ಖರ್ಗೆ ಆರೋಪಿಸಿದ್ದರು.
ಸಾರ್ವಜನಿಕ ಹಾಗೂ ಸರ್ಕಾರಿ ಜಾಗದಲ್ಲಿ ಆಯೋಜಿಸುವ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಅಗತ್ಯ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಸಾರ್ವಜನಿಕ ಆಸ್ತಿಯ ಬಳಕೆಯನ್ನು ನಿಯಂತ್ರಿಸುವ ಪ್ರಸ್ತಾವಿತ ಮಸೂದೆಯು, ಕಾರ್ಯಕ್ರಮಗಳನ್ನು ನಡೆಸಲು ಪೂರ್ವಾನುಮತಿ ಕಡ್ಡಾಯಗೊಳಿಸುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಯಾವುದೇ ನಿರ್ದಿಷ್ಟ ಸಂಸ್ಥೆ ಅಥವಾ ಸಂಘದ ಬಗ್ಗೆ ಯಾವುದೇ ನಿರ್ದಿಷ್ಟ ಚರ್ಚೆ ನಡೆದಿಲ್ಲ ಎಂದು ಅವರು ಹೇಳಿದರು.
"ಆದಾಗ್ಯೂ, ರಾಜಕೀಯ ಪಕ್ಷವಾಗಲಿ ಅಥವಾ ಸಂಘಟನೆಯಾಗಲಿ, ಯಾರಾದರೂ ಕಾರ್ಯಕ್ರಮವನ್ನು ನಡೆಸುವ ಮೊದಲು ಪೊಲೀಸರಿಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ವಾಡಿಕೆಯಾಗಿದೆ. ಇದು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಮಾಡಲು ಸಹಾಯ ಮಾಡುತ್ತದೆ" ಎಂದು ಸಿಎಂ ಸಮರ್ಥಿಸಿಕೊಂಡರು.
ಇನ್ನು ಈ ಮಸೂದೆ RSSಗೆ ಸಂಬಂಧಿಸಿದೆಯೇ ಎಂದು ಖರ್ಗೆ ಅವರನ್ನು ಕೇಳಿದಾಗ, ಅವರು "ಮಸೂದೆಯಲ್ಲಿ ಆರ್ ಎಸ್ಎಸ್ ಅಂತ ಎಲ್ಲಿದೆ? ಜನರು ಇದನ್ನು RSS ಮಸೂದೆ ಎಂದು ಏಕೆ ಕರೆಯುತ್ತಿದ್ದಾರೆ? ಈ ಮಸೂದೆ ಯಾರಿಗೂ ವಿರುದ್ಧವಾಗಿಲ್ಲ" ಎಂದು ಉತ್ತರಿಸಿದರು.
ಪ್ರಸ್ತಾವಿತ ಮಸೂದೆಗೆ ಪ್ರತಿಕ್ರಿಯಿಸಿದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಖರ್ಗೆ ಅವರಿಗೆ ಧೈರ್ಯವಿದ್ದರೆ RSS ಅನ್ನು ನಿಷೇಧಿಸಲಿ ಎಂದು ಸವಾಲು ಹಾಕಿದರು.
"ಅವರು ಅದನ್ನು ನಿಷೇಧಿಸಲಿ. ಆರ್ಎಸ್ಎಸ್ ಇಂತಹ ಅನೇಕ ಜನರನ್ನು ನೋಡಿದೆ. ಯಾರಾದರೂ ಅದರ ಬಗ್ಗೆ ಮಾತನಾಡಿದರೆ ಏನೂ ಆಗುವುದಿಲ್ಲ" ಎಂದು ಅಶೋಕ್ ಮಾಧ್ಯಮಗಳಿಗೆ ತಿಳಿಸಿದರು.