

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಅರಣ್ಯ ಸಿಬ್ಬಂದಿಯೊಂದಿಗೆ ನಡೆದಿತ್ತು ಎನ್ನಲಾದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಹನೂರು ಎನ್ಕೌಂಟರ್ ಪ್ರಕರಣದ ಕುರಿತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ನೀಡಿರುವ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ರಾಜಕೀಯ ನಾಯಕರು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಹಾಗೂ ಇತರ ರಾಜ್ಯಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, “ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯ ಮತ್ತೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರಸೆಲ್ವಂ ಆಗಿರಲಿ ಅಥವಾ ಯಾರೇ ಆಗಿರಲಿ, ಅವರು ರಾಜಕೀಯ ನೀತಿಯನ್ನು ಪಾಲಿಸಬೇಕು. ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆಗಳಿವೆ. ಇದನ್ನೂ ಅವರು ಅರ್ಥಮಾಡಿಕೊಳ್ಳಬೇಕು,” ಎಂದರು.
ನಮ್ಮ ರಾಜ್ಯದ ಹಿತಾಸಕ್ತಿಗಳನ್ನು ಹೇಗೆ ರಕ್ಷಿಸಬೇಕೆಂಬುದು ನಮಗೆ ಗೊತ್ತಿದೆ. ಅವರು ಅವರ ಕೆಲಸ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ನನಗೆ ಇಷ್ಟವಿಲ್ಲ ಎಂದು ಅವರು ಹೇಳಿದರು.
ಈ ಪ್ರಕರಣದ ಕುರಿತು ಪ್ರಾಮಾಣಿಕ ತನಿಖೆ ನಡೆಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆಯಷ್ಟೇ. ಅವರು ಅವರ ಕೆಲಸ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು.
ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದ ತಮಿಳು ನಾಡು ಸಿಎಂ ವಿಜಯ್, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.