

ಬೆಂಗಳೂರು: ಬಹುಕೋಟಿ ರೂಪಾಯಿ ಮೌಲ್ಯದ ಕರ್ನಾಟಕ ದಲಿತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಚಿವ ಬಿ. ನಾಗೇಂದ್ರ ಅವರ ಸಂಪರ್ಕವಿದೆ ಎಂದು ಆರೋಪಿಸಿ, ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದ್ದು, ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ..ವೈ.ವಿಜಯೇಂದ್ರ, ಸಿಟಿ ರವಿ ಸೇರಿದಂತೆ ಹಲವರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಲೋಕಾಯುಕ್ತ ಕಚೇರಿ ಕಡೆಯಿಂದ ವಿಧಾನಸೌಧಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಈ ವೇಳೆ ಗೇಟ್ ಬಳಿಯೇ ಅವರನ್ನು ತಡೆದು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಮಾತನಾಡಿದ್ದ ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಕುರಿತು ಸರ್ಕಾರದಿಂದ ಉತ್ತರ ಪಡೆಯಲು ಸೋಮವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಿಸಿದ್ದರು.
ವಾಲ್ಮೀಕಿ ನಿಗಮಕ್ಕೆ ಸೇರಿದ ರೂ.187 ಕೋಟಿ ಹಣವನ್ನು ರಾಜ್ಯದ ಬೊಕ್ಕಸದಿಂದ ದುರ್ಬಳಕೆ ಮಾಡಿಕೊಂಡು ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.