ಕ್ಲೈಮ್ಯಾಕ್ಸ್ ಹಂತಕ್ಕೆ ಸಚಿವ ನಾಗೇಂದ್ರ ವಿವಾದ: ರಾಹುಲ್ ಗಾಂಧಿಗೆ ವರದಿ ಒಪ್ಪಿಸಿದ ಡಿಕೆಶಿ, ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಲೆಕ್ಕಾಚಾರ..!

ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠಾವಂತ ನಾಯಕ. ಅವರು ನಮ್ಮ ಪಕ್ಷದ ದೊಡ್ಡ ಆಸ್ತಿ. ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಯಾವುದೇ ತಪ್ಪಿಲ್ಲ ಎಂಬುದು ನಮಗೆಲ್ಲ ಗೊತ್ತಿದೆ. ಆದರೆ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ.
Nagendra
ಸಚಿವ ಬಿ. ನಾಗೇಂದ್ರ
Updated on

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ದೆಹಲಿಯಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಪಕ್ಷದ ಹಿತದೃಷ್ಟಿಯಿಂದ ಯಾವುದೇ ತ್ಯಾಗಕ್ಕೂ ನಾಗೇಂದ್ರ ಸಿದ್ಧರಿದ್ದಾರೆ. ಆದರೆ, ಬಿಜೆಪಿ ಒತ್ತಡಕ್ಕೆ ಮಣಿದು ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಪರಿಸ್ಥಿತಿ ಇನ್ನೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠಾವಂತ ನಾಯಕ. ಅವರು ನಮ್ಮ ಪಕ್ಷದ ದೊಡ್ಡ ಆಸ್ತಿ. ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಯಾವುದೇ ತಪ್ಪಿಲ್ಲ ಎಂಬುದು ನಮಗೆಲ್ಲ ಗೊತ್ತಿದೆ. ಆದರೆ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಪಕ್ಷದ ಹಿತಕ್ಕಾಗಿ ಅವರು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದಾರೆ.

ಈ ಹಿಂದೆ ಕೂಡ ನಾಗೇಂದ್ರ ಅವರು ಪಕ್ಷದ ಹಿತಕ್ಕಾಗಿ ತ್ಯಾಗ ಮಾಡಿದ್ದಾರೆ. ಈಗಲೂ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಈ ವಿಚಾರದ ನೆಲದ ವಾಸ್ತವಾಂಶವನ್ನು ತಾವು ಹೈಕಮಾಂಡ್‌ಗೆ ವಿವರಿಸಿದ್ದು, ಮುಂದಿನ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ಯಾವುದೇ ಸತ್ಯವಿಲ್ಲ. ಬಿಜೆಪಿಯೇ ಈ ಪ್ರಕರಣವನ್ನು ಸೃಷ್ಟಿಸಿದೆ. ಇಲ್ಲದ ವಿಚಾರವನ್ನು ದೊಡ್ಡ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

‘ಶ್ರೀರಾಮುಲು ಸೋಲಿಸಿದ್ದಕ್ಕೆ ಬಿಜೆಪಿ ಅಸಮಾಧಾನ’

ಬಿಜೆಪಿಯ ಪ್ರಮುಖ ನಾಯಕ ಬಿ. ಶ್ರೀರಾಮುಲು ಅವರನ್ನು ನಾಗೇಂದ್ರ ಸೋಲಿಸಿದ್ದು ಹಾಗೂ ಕಾಂಗ್ರೆಸ್ ರಾಜ್ಯದಲ್ಲಿ ಸುಮಾರು 17 ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದನ್ನು ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಯಾವುದೇ ವಿಚಾರವಿಲ್ಲದಿದ್ದರೂ ಒಂದು ಕಥೆಯನ್ನು ಕಟ್ಟಿಕೊಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ದೂರಿದರು.

ರಾಹುಲ್ ಗಾಂಧಿ ಅವರೊಂದಿಗೆ ನಾಗೇಂದ್ರ ವಿಚಾರವೂ ಚರ್ಚೆಗೆ ಬಂದಿತೇ ಎಂಬ ಪ್ರಶ್ನೆಗೆ ಉತ್ತರಿಸಿ, “ರಾಜ್ಯ, ದೇಶ ಮತ್ತು ಪಕ್ಷದ ಹಿತದೃಷ್ಟಿಯಿಂದ ಅಗತ್ಯವಿರುವ ಎಲ್ಲ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.

Nagendra
ಶೀಘ್ರ ಡಿಕೆ ಸರ್ಕಾರದ ಮೊದಲ ವಿಕೆಟ್ ಪತನ? ವಾಲ್ಮೀಕಿ ಹಗರಣದ ಎಫೆಕ್ಟ್: ಇನ್ನೆರಡು ದಿನದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ?

‘ಪಾದಯಾತ್ರೆ ನಡೆಸಲಿ, ತಡೆಯಲು ಸಾಧ್ಯವೇ?’

ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಾದಯಾತ್ರೆ ನಡೆಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅವರು ಪಾದಯಾತ್ರೆ ನಡೆಸಲು ಬಯಸಿದರೆ ನಾವು ಹೇಗೆ ತಡೆಯಲು ಸಾಧ್ಯ? ನಡೆಸಲಿ. ಆದರೆ, ವಿಧಾನಸಭೆಯ ಒಳಗೆ ರಾಜೀನಾಮೆ ಏಕೆ ಬೇಕು ಎಂಬುದನ್ನು ಚರ್ಚಿಸಲು ಸರಿಯಾದ ನೋಟಿಸ್ ನೀಡುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಸಲಿಲ್ಲ” ಎಂದು ವ್ಯಂಗ್ಯವಾಡಿದರು.

ಶೀಘ್ರದಲ್ಲೇ ಕರ್ನಾಟಕಕ್ಕೆ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಗಿಗ್ ಕಾರ್ಮಿಕರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

“ಗಿಗ್ ಕಾರ್ಮಿಕರು ಮತ್ತು ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಸಮಾವೇಶವನ್ನು ಆಯೋಜಿಸುತ್ತಿದ್ದೇವೆ. ಶಾಲಾ ಶುಲ್ಕಗಳು ಅತಿಯಾಗದಂತೆ ನೋಡಿಕೊಳ್ಳಲು ಹಾಗೂ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವಂತೆ ಖಚಿತಪಡಿಸಲು ಸಚಿವ ಸಂಪುಟದ ಉಪಸಮಿತಿಯನ್ನೂ ರಚಿಸಿದ್ದೇವೆ” ಎಂದು ಹೇಳಿದರು.

ಈ ನಡುವೆ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬಳಿಕ ದೆಹಲಿಯಲ್ಲಿದ್ದ ನಾಗೇಂದ್ರ ಅವರೊಂದಿಗೂ ಶಿವಕುಮಾರ್ ಮತ್ತು ಸುರ್ಜೇವಾಲಾ ಮಾತುಕತೆ ನಡೆಸಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಹುಕೋಟಿ ಮೌಲ್ಯದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರವಿದೆ ಎಂದು ಆರೋಪಿಸಿ ಅವರ ವಜಾಕ್ಕೆ ಒತ್ತಾಯಿಸುತ್ತಿರುವ ಬಿಜೆಪಿ, ಸೆಪ್ಟೆಂಬರ್ 1ರಿಂದ ರಾಯಚೂರಿನಿಂದ ಬಳ್ಳಾರಿವರೆಗೆ ಪರಿಶಿಷ್ಟ ಪಂಗಡ ಪ್ರದೇಶಗಳಲ್ಲಿ 10 ದಿನಗಳ ಪಾದಯಾತ್ರೆ ನಡೆಸಲು ಸಜ್ಜಾಗಿದೆ.

ಇದೇ ವೇಳೆ ನಾಗೇಂದ್ರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಸಿಬಿಐ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಂಪರ್ಕಿಸಿದೆ ಎನ್ನಲಾಗಿದ್ದು, ಈ ವಿಚಾರದಲ್ಲೂ ರಾಜ್ಯಪಾಲರ ಹಸ್ತಕ್ಷೇಪಕ್ಕೆ ಬಿಜೆಪಿ ಮನವಿ ಮಾಡಿದೆ.

ಏತನ್ಮಧ್ಯೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ನಾಗೇಂದ್ರ ವಿಚಾರದ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಯಾವುದೇ ಪರಿಸ್ಥಿತಿಯಲ್ಲೂ ನಾಗೇಂದ್ರ ಅವರು ಸಚಿವರಾಗಿ ಮುಂದುವರಿಯಬೇಕು ಎಂಬ ನಿಲುವಿಗೆ ಸತೀಶ್ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com