

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಸಂಸದೀಯ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಇದೆ.
ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಬಿಜೆಪಿಯ ಪರಮೋಚ್ಛ ನಿರ್ಧಾರಕ ಸಂಸ್ಥೆಯಾದ ಸಂಸದೀಯ ಮಂಡಳಿಯಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿತ್ತು.
ಇದೀಗ ಬದಲಾದ ಸನ್ನಿವೇಶದಲ್ಲಿ ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ ಸರಣಿ ಬದಲಾವಣೆಗಳನ್ನು ತರುತ್ತಿದ್ದು, ಬಿಜೆಪಿ ಸಂಸದೀಯ ಮಂಡಳಿಯನ್ನು ಪರಿಷ್ಕರಣೆ ಮಾಡಲಿದ್ದಾರೆ. ಈ ವೇಳೆ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈಗಾಗಲೇ ಕರ್ನಾಟಕದ ಎಂ. ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ಈಗ ಇಡೀ ರಾಷ್ಟ್ರಕ್ಕೆ ಅನ್ವಯವಾಗುವಂತೆ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲು ಬಿಜೆಪಿ ಮುಂದಾಗಿದ್ದು, ಬಿಎಸ್ವೈ ಸೇರಿದಂತೆ ಕೆಲ ಹಿರಿಯರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
12 ಸದಸ್ಯರ ಸಂಸದೀಯ ಮಂಡಳಿಯು ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಟಿಕೆಟ್ ಹಂಚಿಕೆ ಸೇರಿದಂತೆ ಪಕ್ಷದ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಈ ಎಲ್ಲಾ ಪ್ರಮುಖ ಪ್ರಕ್ರಿಯೆಗಳಲ್ಲಿ ಯಡಿಯೂರಪ್ಪ ಅವರು ರಾಜ್ಯವನ್ನು ಪ್ರತಿನಿಧಿಸುತ್ತ ಬಂದಿದ್ದರು.
ಆದ್ರೆ ‘ಬದಲಾದ ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಹೊಸ ಚಿಂತನೆಗಳಿಗೆ ಅವಕಾಶ ಮಾಡಿಕೊಡಲು ಹೈಕಮಾಂಡ್ ನಿರ್ಧರಿಸಿದೆ. ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಈಗಾಗಲೇ ಪರೋಕ್ಷ ಸಂದೇಶ ರವಾನೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಪಕ್ಷದ ಸಂಘಟನಾತ್ಮಕ ಸುಧಾರಣೆಯ ಭಾಗವಾಗಿ ನಡೆಯುತ್ತಿರುವ ಈ ಬದಲಾವಣೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.