

ಸಿದ್ದರಾಮಯ್ಯನವರು ಈಗಿನ ಪೂರ್ಣಾವಧಿ ಐದು ವರ್ಷಗಳಷ್ಟೇ ಅಲ್ಲ, ಮುಂದಿನ 15 ವರ್ಷಗಳಿಗೂ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಆಶಯ ವ್ಯಕ್ತಪಡಿಸಿದ್ದಾರೆ.
“ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಮೇಲೂ ನನಗೆ ಅಪಾರ ಗೌರವ ಇದೆ. ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ನಾವು ಅದನ್ನು ಪಾಲಿಸುತ್ತೇವೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಾವು ಎಲ್ಲರೂ ಏಕತೆಯಿಂದ ಇದ್ದೇವೆ ಎಂದು ಅವರು ಪುನರುಚ್ಚರಿಸಿದರು.
ಅವರು ನಿನ್ನೆ ಮೈಸೂರು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಂ ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್. ನಮಗೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹೈಕಮಾಂಡ್ ಆಗಿದ್ದಾರೆ. ನಾವ್ಯಾರೂ ನೇರವಾಗಿ ಭೇಟಿ ಮಾಡುವವರಲ್ಲ. ಹೀಗಾಗಿ ನಮ್ಮ ನಾಯಕರು ಹೇಳುವ ಮಾತು ಅಂತಿಮವಾಗಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು 5 ವರ್ಷ ಮಾತ್ರವಲ್ಲ, ಮುಂದಿನ 15 ವರ್ಷಗಳ ಕಾಲವೂ ಮುಖ್ಯಮಂತ್ರಿಯಾಗಿರಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದರು.
ವಿದೇಶ ಪ್ರವಾಸ ಹೊಸದಲ್ಲ
ಶಾಸಕರು ವಿದೇಶ ಪ್ರವಾಸ ಹೋಗುವುದು ಹೊಸದೇನಲ್ಲ. ನಾನು ಕೂಡ ಆರು ತಿಂಗಳ ಹಿಂದೆ ಫಾರಿನ್ ಟೂರ್ ಹೋಗಿ ಬಂದಿದ್ದೆ. ಶಾಸಕರ ವಿದೇಶ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾಯಕತ್ವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.
ಬಜೆಟ್ ನಲ್ಲಿ ಮೈಸೂರಿಗೆ ಹೆಚ್ಚಿನ ಅನುದಾನ, ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ
ಮೈಸೂರು ಅಬಿವೃದ್ಧಿಗೆ ಸಿಎಂ ಸಾಕಷ್ಟು ಯೋಜನೆ ನೀಡಿದ್ದಾರೆ. ಅನುದಾನ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಫ್ಲೈ ಓವರ್, ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಅನುದಾನ ಕೇಳಿದ್ದೇವೆ. ಡಾ ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ, ಯಾರೋ ಹೇಳುತ್ತಾರೆಂದು ಅದಕ್ಕೆ ಕಿವಿಗೊಡುವ ಅಗತ್ಯವಿಲ್ಲ ಎಂದರು.
Advertisement