

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಬದಲಾವಣೆಯ ಸುದ್ದಿಯಾಗುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಲಾಗಿದ್ದ ಸರ್ಕಾರಕ್ಕೆ ಸಾವಿರ ದಿನಗಳ ಸಂಭ್ರಮ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ಗೈರಾಗಿರುವುದು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಅಧಿಕಾರ ಹಂಚಿಕೆ ಕುರಿತು ಯಾರೊಬ್ಬರೂ ಮಾತನಾಡದೆ ಇರಿ ಎಂದು ಕಾಂಗ್ರೆಸ್ ಹೈಕಮಾಂಡ್ ಎಷ್ಟೇ ಸೂಚನೆ ನೀಡಿದರೂ, ಆ ಬಗ್ಗೆ ರಾಜ್ಯದಲ್ಲಿ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಕೈಕಮಾಂಡ್ ನಾಯಕರಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸುವ ಸಲುವಾಗಿ ಕಾರ್ಯಕ್ರಮಕ್ಕೆ ಗೈರಾಗಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ನಡೆದ ದಿವಂಗತ ಭೀಮಣ್ಣಖಂಡ್ರೆ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿಯೇ ಇದ್ದರು. ಆದರೂ, ಶನಿವಾರ ಆಯೋಜಿಸಲಾಗಿದ್ಧ ಸಮಾವೇಶಕ್ಕೆ ಗೈರಾಗಿರುವುದು ಕಾಂಗ್ರೆಸ್ ಪಾಳಯದೊಳಗೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಇತ್ತ ವಿರೋಧ ಪಕ್ಷದ ವಿಪಕ್ಷ ನಾಯಕ ಆರ್ ಅಶೋಕ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಸಾವಿರಾರು ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಾಚರಣೆ ಬಗ್ಗೆ ಕರ್ನಾಟಕದ ಜನತೆಗೆ ಮಾತ್ರ ಹೇಸಿಗೆ ಹುಟ್ಟಿಲ್ಲ, ಸ್ವತಃ ಕಾಂಗ್ರೆಸ್ ಹೈಕಮಾಂಡ್ಗೂ ಹೇಸಿಗೆ ಹುಟ್ಟಿದಂತಿದೆ' ಎಂದು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರೇ, ಸಾವಿರ ದಿನಗಳ ಸಂಭ್ರಮಾಚರಣೆಗೆ ನಿಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರು ಯಾಕೆ ಬರಲಿಲ್ಲ? ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಲ್ಲೇ ಇದ್ದರು ಬರಲಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಮುಂದುವರಿದು, ದೆಹಲಿಗೆ ಕಳುಹಿಸಬೇಕಾದ ಲೆಕ್ಕದಲ್ಲಿ ಏನಾದರೂ ಕಡಿಮೆ ಆಯಿತಾ? ಅಥವಾ ಹೈಕಮಾಂಡ್ ನಾಯಕರನ್ನು ಕಾರ್ಯಕ್ರಮಕ್ಕೆ ತಾವು ಆಹ್ವಾನಿಸಲೇ ಇಲ್ಲವೇ ಎಂದು ಆರ್ ಅಶೋಕ ವ್ಯಂಗ್ಯವಾಡಿದ್ದಾರೆ.
Advertisement