

ಕಾರವಾರ: ನಾಯಕತ್ವ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರಿಗೆ ಸ್ಪಷ್ಟ ಹಾಗೂ ಕಠಿಣ ಸಂದೇಶ ನೀಡಿದ್ದಾರೆ.
ತಮ್ಮನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವ ನಾಯಕರಿಗೆ ಮೌನವಾಗಿರುವಂತೆ ತಾಕೀತು ಮಾಡಿದ್ದಾರೆ.
ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ತಮ್ಮ ಪರವಾಗಿ ಹೇಳಿಕೆ ನೀಡಿದ್ದ ಶಾಸಕ ಇಕ್ಬಾಲ್ ಹುಸೇನ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಕ್ಬಾಲ್ ಹುಸೇನ್ ಬಾಯಿ ಮುಚ್ಚಿಕೊಳ್ಳಬೇಕು. ರವಿ ಮತ್ತು ಶಿವಗಂಗ ಕೂಡ ಮೌನವಾಗಿರಬೇಕು. ಅವರು ಮೌನವಾಗಿದ್ದರೆ ನನಗೂ ಒಳ್ಳೆಯದಾಗುತ್ತೆ ಎಂದು ಹೇಳಿದರು.
ಇತ್ತೀಚೆಗೆ ಕೆಲವು ಕಾಂಗ್ರೆಸ್ ನಾಯಕರ ವಿದೇಶ ಪ್ರವಾಸಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿ ಅವರು, ವಿದೇಶಕ್ಕೆ ತೆರಳಿದವರು ಎಲ್ಲರೂ ಪಕ್ಷದೊಳಗಿನವರೇ ಎಂದು ಸ್ಪಷ್ಟಪಡಿಸಿದರು.
ವಿದೇಶ ಪ್ರವಾಸಕ್ಕೆ ಹೋಗಿರುವವರು ನಮ್ಮದೇ ಪಕ್ಷದವರು. ಅವರು ಹಿಂತಿರುಗಿದ ನಂತರ ಅವರು ಏಕೆ ಹೋದರು ಎಂಬುದನ್ನು ನಾವು ಚರ್ಚಿಸುತ್ತೇವೆ ಎಂದರು.
ಪ್ರಿಯಾಂಕಾ ಗಾಂಧಿ ಜೊತೆ ಚರ್ಚಿಸಿಲ್ಲ
ಇದೇ ವೇಳೆ ರಾಜ್ಯ ರಾಜಕೀಯದ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಲಿದ್ದಾರೆ.
ನಾನು ಎಲ್ಲಿಯೂ ಮತ್ತು ಎಲ್ಲೆಡೆ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಇದು ಸಾರ್ವಜನಿಕವಾಗಿ ಚರ್ಚಿಸಬಹುದಾದ ವಿಷಯವಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದೊಳಗೆ ಮುಖ್ಯಮಂತ್ರಿ ಸ್ಥಾನ ಕುರಿತ ಒಳಚರ್ಚೆಗಳು ನಡೆಯುತ್ತಿರುವುದು ಬಹಿರಂಗ ರಹಸ್ಯವಾಗಿದೆ. ಒಂದು ವರ್ಗ ಡಿಕೆ.ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದು ಹಾಗೂ ಸಮಯ ಸೂಚನೆ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಇದರ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು, ವಿಶೇಷವಾಗಿ ಅವರ ಪುತ್ರ ಹಾಗೂ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡ್ ಯಾವುದೇ ನಾಯಕತ್ವ ಬದಲಾವಣೆ ಸೂಚನೆ ನೀಡಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದಾರೆ.
ಏತನ್ಮಧ್ಯೆ ಇದೀಗ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಬೆಂಬಲಿಗರ ಅತಿರೇಕ ಹೇಳಿಕೆಗಳು ಪಕ್ಷದ ಏಕತೆಗೆ ಧಕ್ಕೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಅವರು ಈ ರೀತಿ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರವಾಗಿ ಸ್ಪಷ್ಟೀಕರಣ ನೀಡಿದ ಅವರು. ನಾನು ಲೋಕಾಯುಕ್ತ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾಗಿದೆ. ನಾವ್ಯಾರು ಈ ಬಗ್ಗೆ ವಿಚಾರ ಮಾಡಲು ಹೋಗಿಲ್ಲ. ಬಿಜೆಪಿಯವರೇ ಈ ಬಗ್ಗೆ ಮಾತನಾಡಬೇಕು ಎಂದರು.
Advertisement