

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದ್ದು, ಈ ನಡುವೆ ಕೈ ಪಾಳಯದಲ್ಲಿ ಟಿಕೆಟ್ಗಾಗಿ ಪೈಪೋಟಿ ಆರಂಭವಾಗಿದೆ.
ಮಾಜಿ ಸಚಿವ ಎಚ್.ವೈ ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ, ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನನಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದಾಗ್ಯೂ, ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ತೀವ್ರ ಪೈಪೋಟಿ ಆರಂಭಗೊಂಡಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಮನ್ರೇಗಾ ಯೋಜನೆ ರದ್ದುಗೊಳಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಚಿಕ್ಕಬಳ್ಳಾಪುರಕ್ಕೆ ತೆರಳುವ ಮೊದಲು ಜಕ್ಕೂರು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಸುರ್ಜೇವಾಲಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬೂಂದಿದೆ.
45 ನಿಮಿಷಗಳ ಅನೌಪಚಾರಿಕ ಮಾತುಕತೆಯಲ್ಲಿ, ಟಿಕೆಟ್ಗಾಗಿ ಪಕ್ಷದಲ್ಲಿ ತೀವ್ರ ಪೈಪೋಟಿ ನಡೆಯುತ್ತಿರುವ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದಾವಣಗೆರೆ ದಕ್ಷಿಣಕ್ಕೆ, ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಮ್ಮ ಪುತ್ರ ಸಮರ್ಥ್ ಅವರನ್ನು ಕಣಕ್ಕಿಳಿಸುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ ಶಾಮನೂರು ಅವರ ಕಿರಿಯ ಪುತ್ರ ಎಸ್.ಎಸ್. ಗಣೇಶ್ ಅವರ ಹೆಸರೂ ಕೂಡ ಕೇಳಿಬಂದಿದೆ.
ಈ ನಡುವೆ ಮಲ್ಲಿಕಾರ್ಜುನ್ ಅವರು ಸಂಪುಟದ ಸಚಿವರಾಗಿದ್ದು, ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂಸದೆಯಾಗಿರುವುದರಿಂದ, ಶಾಮನೂರು ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಈ ಸುದ್ದಿ ತಿಳಿದ ಮಲ್ಲಿಕಾರ್ಜುನ್ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಹ ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 80,000 ಮತದಾರರಿದ್ದು, ಈ ಸಮುದಾಯ ಟಿಕೆಟ್ಗಾಗಿ ಪ್ರಯತ್ನಿಸುತ್ತಿದೆ. ಶಾಮನೂರು ಸಮುದಾಯದ ಅಭ್ಯರ್ಥಿಗೆ ಸ್ಥಾನ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು ಹೇಳಿದ್ದಾರೆ,
ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ಬೆಂಬಲದೊಂದಿಗೆ ಎಂಎಲ್ಸಿ ಕೆ. ಅಬ್ದುಲ್ ಜಬ್ಬಾರ್ ಟಿಕೆಚ್ ಗಾಗಿ ಲಾಬಿ ನಡೆಯುತ್ತಿದ್ದಾರೆ.
ಈ ನಡುವೆ "ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಹಿಂದೂ ಮತ್ತು ಮುಸ್ಲಿಂ ಮತದಾರರು ಧ್ರುವೀಕರಣಗೊಂಡರೆ ಬಿಜೆಪಿಗೆ ಮೇಲುಗೈ ಸಿಗಬಹುದು" ಎಂದು ರಾಜಕೀಯ ವಿಶ್ಲೇಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸುವ ಮೂಲಕ ಗೆಲವು ಸಾಧಿಸಿತ್ತು. ಈ ಮೂಲಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಅವರನ್ನು ಸೋಲು ಕಾಣುವಂತೆ ಮಾಡಿತ್ತು.
ಕಾಂಗ್ರೆಸ್ ಪರವಾಗಿ ಚುನಾವಣಾ ಉಸ್ತುವಾರಿ ವಹಿಸಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅಹಿಂದ ಮತದಾರರನ್ನು ಒಗ್ಗೂಡಿಸುವ ಮೂಲಕ ಪಠಾಣ್ ಅವರ ಗೆಲುವನ್ನು ಖಚಿತಪಡಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.
ಇನ್ನು ಬಾಗಲಕೋಟೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಠಿಣ ಪರಿಸ್ಥಿತಿ ಎದುರಾಗುವ ಸಾಧ್ಯತೆಗಳಿವೆ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ್ ಮತ್ತು ಉಮೇಶ್ ಮತ್ತು ಪುತ್ರಿಯರಾದ - ಮಾಜಿ ಜಿಪಂ ಅಧ್ಯಕ್ಷೆ ಬಯಕ್ಕ ಮೇಟಿ ಮತ್ತು ಮಹಾದೇವಿ ಮೇಟಿ - ಟಿಕೆಟ್ಗಾಗಿ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ
ಇದರಂತೆ ಮೇಟಿ ಕುಟುಂಬವನ್ನು ಒಂದುಗೂಡಿಸಲು ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವೊಲಿಸುವ ಪ್ರಯತ್ನ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Advertisement