ವರುಣಾ ಕ್ಷೇತ್ರಕ್ಕೆ 320 ಕೋಟಿ ಭರ್ಜರಿ ಅನುದಾನ : ಸಿದ್ದರಾಮಯ್ಯ ವಿದಾಯದ ಉಡುಗೊರೆಯೋ? ಕುಟುಂಬದ ಮುಂದಿನ ಪೀಳಿಗೆಗಾಗಿ ಕ್ಷೇತ್ರ ಭದ್ರಪಡಿಸುವ ತಂತ್ರವೋ!

ವರುಣಾ ಕ್ಷೇತ್ರಕ್ಕೆ ಮತ್ತೊಮ್ಮೆ 320 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡುವ ಮೂಲಕ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.
CM Siddaramaiah
ವರುಣಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ರಾಜ್ಯ ಬಜೆಟ್ ಮಂಡಿಸುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಜೆಟ್ ಪೂರ್ವ ಉಡುಗೊರೆಯನ್ನು ನೀಡಿದ್ದು, ರಾಜ್ಯಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ವರುಣಾ ಕ್ಷೇತ್ರಕ್ಕೆ ಮತ್ತೊಮ್ಮೆ 320 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡುವ ಮೂಲಕ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ನಾಯಕತ್ವ ಬದಲಾವಣೆಯ ಊಹಾಪೋಹಗಳ ನಡುವೆ ಒಂದು ವಿದಾಯ ಉಡುಗೊರೆಯೇ ಅಥವಾ ಅವರ ವಂಶಪರಂಪರೆ ರಾಜಕೀಯ ಭದ್ರಪಡಿಸಿಕೊಳ್ಳುವ ಲೆಕ್ಕಾಚಾರದ ಕ್ರಮವೇ? ಎಂಬ ಪ್ರಶ್ನೆ ಮೂಡಿಸಿದೆ.

ಶಂಕುಸ್ಥಾಪನಾ ಸಮಾರಂಭದ ಸಮಯವು ರಾಜಕೀಯವಾಗಿ ಮಹತ್ವದ್ದಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಂಭಾವ್ಯ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಡಿರುವಾಗ, ಸಿದ್ದರಾಮಯ್ಯ ಅವರು ದಶಕಗಳಿಂದ ಪ್ರತಿನಿಧಿಸುವ ಕ್ಷೇತ್ರದಿಂದ ಬಲವಾದ ಸಂದೇಶ ನೀಡಲು ಆಯ್ಕೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ನಡೆಯನ್ನು ಸಾಂಕೇತಿಕ ಮತ್ತು ಕಾರ್ಯತಂತ್ರದ ಭಾಗ ಎನ್ನುತ್ತಿದ್ದಾರೆ. ಆದರೆ ಅವರ ಆಪ್ತರು ಇದನ್ನು ಬೇರೆಯದ್ದೇ ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.

ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿರುವ ಸಿದ್ದರಾಮಯ್ಯ, ಭಾನುವಾರ ವರುಣ ಕ್ಷೇತ್ರದ ಕುಪ್ಪಾಯ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಇಲಾಖೆಗಳನ್ನು ಒಳಗೊಂಡ 154 ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳು ಮೂಲಸೌಕರ್ಯ ಮತ್ತು ನಗರಾಭಿವೃದ್ಧಿಯಿಂದ ಹಿಡಿದು ಆರೋಗ್ಯ ಮತ್ತು ಸಮಾಜ ಕಲ್ಯಾಣದವರೆಗೆ ವ್ಯಾಪ್ತಿಸಿದೆ. ಅಲ್ಪಾವಧಿಗಿಂತ ಹೆಚ್ಚಾಗಿ ವರುಣಾ ಕ್ಷೇತ್ರದ ಅಭಿವೃದ್ಧಿಯನ್ನು ದೂರದೃಷ್ಟಿಯಿಂದ ಕೈಗೆತ್ತಿಕೊಳ್ಳಲಾಗಿದೆ ಎಂದಿದ್ದಾರೆ.

CM Siddaramaiah
ತಮ್ಮ ಕ್ಷೇತ್ರ ವರುಣಾದಲ್ಲಿ 324 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಈ ಯೋಜನೆಗಳಲ್ಲಿ ಪ್ರಮುಖವಾದದ್ದು 100 ಕೋಟಿ ರೂ.ಗಳ ವೆಚ್ಚದಲ್ಲಿ ನಿಮ್ಹಾನ್ಸ್ ವಿಸ್ತರಣೆ ಪ್ರಮುಖವಾಗಿದೆ. ಇದೊಂದು ವ್ಯಸನ ಮುಕ್ತ ಕೇಂದ್ರವಾಗಿದೆ. ಮಾನಸಿಕ ಆರೋಗ್ಯ ಸೇವೆಗಳನ್ನು ಬಲಪಡಿಸುವ ಮತ್ತು ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಮಸ್ಯೆಯಾದ ಕುಡಿತದ ಚಟ ಹೊಂದಿರುವವರನ್ನು ನಿಭಾಯಿಸುವ ಗುರಿ ಹೊಂದಿದೆ.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದೊಂದಿಗೆ ಇರುವ ತಮ್ಮ ಭಾವನಾತ್ಮಕ ಸಂಬಂಧದ ಬಗ್ಗೆ ಒತ್ತಿ ಹೇಳಿದರು. ತಮ್ಮ ಜವಾಬ್ದಾರಿ ಚುನಾವಣಾ ಚಕ್ರಗಳನ್ನು ಮೀರಿದೆ ಎಂದು ಹೇಳಿದರು. 2024 ರಲ್ಲಿ 501 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಿದ್ದೆವು, 2025 ರಲ್ಲಿ 1,108 ಕೋಟಿ ರೂ. ಮೌಲ್ಯದ ಯೋಜನೆಗೆ ಚಾಲನೆ ನೀಡಿದ್ದವು. ಈಗ ಬಜೆಟ್‌ಗೆ ಮೊದಲೇ 320 ಕೋಟಿ ರೂ. ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ವರುಣಾ ಕ್ಷೇತ್ರದಲ್ಲಿ ಒಟ್ಟು 1,932 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ಹೇಳಿದರು.

ಮೈಸೂರು ಜಿಲ್ಲೆಯಲ್ಲಿಯೇ ಸುಮಾರು 10,000 ಕೋಟಿ ರೂ. ಮೌಲ್ಯದ ಕಲ್ಯಾಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಮೈಸೂರಿನಲ್ಲಿ ಶಾಶ್ವತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವುದು ತಮ್ಮ ಕರ್ತವ್ಯ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಊಹಾಪೋಹಗಳ ನಡುವೆ ವಿಶೇಷವಾಗಿ ಬಜೆಟ್‌ಗೆ ಮೊದಲು ಇಷ್ಟು ದೊಡ್ಡ ಮೊತ್ತದ ಅನುದಾನ ಘೋಷಣೆ ಮಾಡಿರುವುದು ಸಿದ್ದರಾಮಯ್ಯ ಭವಿಷ್ಯಕ್ಕಾಗಿ ಅಥವಾ ಅವರ ಕುಟುಂಬಕ್ಕಾಗಿ ಇಲ್ಲವೇ ವರುಣಾದಿಂದ ಮುಂದಿನ ಪೀಳಿಗೆಯ ನಾಯಕತ್ವಕ್ಕಾಗಿ ನೆಲವನ್ನು ಸಿದ್ಧಪಡಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಮುಖ್ಯಮಂತ್ರಿಯಾಗಿ ಅವರ ಮುಂದುವರಿಕೆಯ ಬಗ್ಗೆ ಇರುವ ಅನಿಶ್ಚಿತತೆಯ ನಡುವೆ ಈ ಘೋಷಣೆ ರಾಜಕೀಯ ವಲಯಗಳಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com