

ಬೆಂಗಳೂರು: ರಾಜ್ಯ ಸರ್ಕಾರ ನೀಡುತ್ತಿರುವ ಶಾಶ್ವತ ನಿವಾಸ ಪ್ರಮಾಣಪತ್ರ (PRC)ದ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದು, ಈ ಕುರಿತು ರಾಜ್ಯಪಾಲರಿಗೂ ದೂರು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ PRC ಯೋಜನೆ ಅಕ್ರಮ ವಲಸಿಗರನ್ನು ರಕ್ಷಿಸಿ ತನ್ನ ಮತಬ್ಯಾಂಕ್ ಭದ್ರಪಡಿಸಿಕೊಳ್ಳುವ ತಂತ್ರವಾಗಿದೆ ಎಂದು ಆರೋಪಿಸಿದರು.
ಈ ವಿಷಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕುರಿತು ಪಕ್ಷದ ಕಾನೂನು ತಜ್ಞರ ತಂಡದ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು. ಮುಂದಿನ ಕಾನೂನು ಕ್ರಮಗಳ ಬಗ್ಗೆ ಆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜಾರಿಗೆ ಮುಂದಾದಾಗ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ PRC ಸಂಪೂರ್ಣ ಅಸಾಂವಿಧಾನಿಕ ಮತ್ತು ತರ್ಕಬದ್ಧವಲ್ಲದ ಕ್ರಮವಾಗಿದೆ ಎಂದು ಟೀಕಿಸಿದರು.
ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಸಿದ್ಧಪಡಿಸುವುದು ಅಥವಾ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಅಧಿಕಾರವು ಕೇಂದ್ರ ಗೃಹ ಸಚಿವಾಲಯಕ್ಕೇ ಸೇರಿದ್ದು, ಸಂಬಂಧಪಟ್ಟ ವ್ಯಕ್ತಿ ಭಾರತದ ನೈಜ ಪ್ರಜೆಯೇ ಎಂಬುದನ್ನು ಸಂಪೂರ್ಣ ಪರಿಶೀಲಿಸಿದ ಬಳಿಕವೇ ಅಂತಹ ಪ್ರಮಾಣಪತ್ರ ನೀಡಬೇಕು ಎಂದು ಹೇಳಿದರು.
ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಮಯದಲ್ಲೇ ರಾಜ್ಯ ಸರ್ಕಾರ PRC ನೀಡಲು ಮುಂದಾಗಿರುವುದು ಅಕ್ರಮ ವಲಸಿಗರನ್ನು ರಕ್ಷಿಸಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಸಂಚು ಎಂಬ ಅನುಮಾನ ಮೂಡಿಸುತ್ತಿದೆ ಎಂದು ಆರೋಪಿಸಿದರು.