

ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಸೋಮವಾರ ಹಿಂಸಾತ್ಮಕ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ರೈತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ವಿಡಿಯೋ ಸಂದೇಶ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಕಳೆದ 500 ದಿನಗಳಿಂದ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸೋಮವಾರ ಅಧಿಕಾರಿಗಳು ಏಕಾಏಕಿ ಗ್ರಾಮಗಳಿಗೆ ತೆರಳಿ ಭೂ ಸಮೀಕ್ಷೆ ನಡೆಸಲು ಮುಂದಾದ ಕಾರಣ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ರೈತರು ಯಾವುದೇ ಕಾರಣಕ್ಕೂ ಶಾಂತಿ ಕಳೆದುಕೊಳ್ಳಬಾರದು. ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತ ಹೋರಾಟವನ್ನು ಮುಂದುವರಿಸಬೇಕು ನಿಮ್ಮ ಹೋರಾಟಕ್ಕೆ ಅನೇಕರು ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ರೈತರ ವಿರುದ್ಧ ಕ್ರಮ ಕೈಗೊಳ್ಳಬೇಡಿ" ಎಂದು ಪೊಲೀಸ್ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ.
ಇದೇ ವೇಳೆ, ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರು ಬಿಡುಗಡೆ ವಿಚಾರದಲ್ಲೂ ಸರ್ಕಾರವನ್ನು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ರೈತರ ಒಪ್ಪಿಗೆ ಪಡೆಯದೇ ಭೂ ಸಮೀಕ್ಷೆ ನಡೆಸಿರುವುದು ಸರಿಯಲ್ಲ ಎಂದು ಆರೋಪಿಸಿದ್ದಾರೆ.