ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಮತ್ತೊಂದು ಸುತ್ತಿನ ಮಾತುಕತೆಗೆ 'ಕೈ' ಕಮಾಂಡ್ ನಿರ್ಧಾರ, ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ..!

ಆಗಸ್ಟ್ ಮೊದಲ ವಾರದಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಮಳೆಗಾಲ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವಿದೆ.
congress leaders in New Delhi.
ಕಾಂಗ್ರೆಸ್ ನಾಯಕರು.
Updated on

ಬೆಂಗಳೂರು/ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಗುರುವಾರ ನವದೆಹಲಿಯಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರೂ, ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ದಿನಾಂಕ ಇನ್ನೂ ಅಂತಿಮವಾಗಿಲ್ಲ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವೈಯಕ್ತಿಕ ಕಾರಣಗಳಿಂದ ಬೆಂಗಳೂರಿಗೆ ಮರಳಿದ್ದರಿಂದ ಸಭೆ ಅಂತಿಮ ನಿರ್ಧಾರಕ್ಕೆ ಬರಲಿಲ್ಲ. ಹೀಗಾಗಿ ಮತ್ತೊಂದು ಸುತ್ತಿನ ಚರ್ಚೆಯ ಬಳಿಕವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಆಗಸ್ಟ್ ಮೊದಲ ವಾರದಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಮಳೆಗಾಲ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಇಂದು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೂ ಚರ್ಚೆ ನಡೆದಿದೆ. ಇದು ಪ್ರಾಥಮಿಕ ಹಂತದ ಚರ್ಚೆ ಮಾತ್ರ. ಸದ್ಯಕ್ಕೆ ದಿನಾಂಕ ಹೇಳಲು ಸಾಧ್ಯವಿಲ್ಲ. ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ಆಗಲಿದೆ ಎಂದು ತಿಳಿಸಿದರು.

ಪ್ರಸ್ತುತ ಸಚಿವ ಸಂಪುಟದಲ್ಲಿ 20 ಸ್ಥಾನಗಳು ಹಾಗೂ ವಿಧಾನಸಭೆ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಸಾಧ್ಯವಾದಷ್ಟು ಅಥವಾ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಬಿ.ಕೆ. ಹರಿಪ್ರಸಾದ್ ಮಾತನಾಡಿ, ಖರ್ಗೆ ಅವರು ಬೆಂಗಳೂರಿಗೆ ಮರಳಿದ್ದರಿಂದ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅವರು ದೆಹಲಿಗೆ ಮರಳಿದ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದರು.

congress leaders in New Delhi.
ಸಚಿವ ಸಂಪುಟ ಕಸರತ್ತು: ರಾಹುಲ್ ಭೇಟಿಗೆ ಡಿಕೆಶಿ-ಸಿದ್ದು ದೆಹಲಿ ಪ್ರಯಾಣ; ಆಕಾಂಕ್ಷಿಗಳಿಗಿದು ನಿರ್ಣಾಯಕ ವಾರ..!

ಮೂಲಗಳ ಪ್ರಕಾರ, ರಾಜ್ಯ ನಾಯಕರು ಸಲ್ಲಿಸಿದ್ದ ಪಟ್ಟಿಯಲ್ಲಿ ಹೆಚ್ಚಿನವರು ಮಾಜಿ ಸಚಿವರೇ ಇದ್ದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವ ನಾಯಕರಿಗೆ ಆದ್ಯತೆ ನೀಡುವ ಹೊಸ ಸಚಿವ ಸಂಪುಟ ರಚಿಸಬೇಕು ಎಂಬ ಸಲಹೆಯನ್ನು ಅವರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿರುವುದರಿಂದ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ನಿರಾಸೆ ಮನೆ ಮಾಡಿದೆ. ಸುಮಾರು 40ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಅಶೋಕ್ ಎಂ. ಪಟ್ಟಣ, ಟಿ.ಬಿ. ಜಯಚಂದ್ರ, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ್, ಜಿ.ಟಿ. ಪಾಟೀಲ್, ಅಪ್ಪಾಜಿ ಸಿ.ಎಸ್. ನಾಡಗೌಡ, ಅಜಯ್ ಸಿಂಗ್, ಸಲೀಂ ಅಹ್ಮದ್ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕೆ ಬಹಿರಂಗವಾಗಿ ತಮ್ಮ ಹಕ್ಕು ಮಂಡಿಸಿದ್ದಾರೆ.

ಇನ್ನೊಂದೆಡೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಭಾಗದ ಕೋಟಾದಡಿ ಮಹಾಂತೇಶ್ ಕೌಜಲಗಿ ಮತ್ತು ಅಶೋಕ್ ಪಟ್ಟಣ ಅವರಿಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದು, ಲಕ್ಷ್ಮಣ ಸವದಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದು ರಾಜಕೀಯ ಸಂದೇಶವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಜುಲೈ 20 ಅಥವಾ 22ಕ್ಕೆ ಪ್ರಮಾಣವಚನ?

ಮೂಲಗಳ ಪ್ರಕಾರ, ಜುಲೈ 20 ಅಥವಾ 22ರಂದು ಹೊಸ ಸಚಿವರ ಪ್ರಮಾಣವಚನ ನಡೆಸುವ ಪ್ರಸ್ತಾವನೆಯನ್ನು ಡಿ.ಕೆ. ಶಿವಕುಮಾರ್ ಮುಂದಿಟ್ಟಿದ್ದಾರೆ.

ಆದರೆ, ಭವಿಷ್ಯದ ರಾಜಕೀಯ ಹೊಂದಾಣಿಕೆಗಾಗಿ ಎರಡು ಅಥವಾ ಮೂರು ಸಚಿವ ಸ್ಥಾನಗಳನ್ನು ಖಾಲಿ ಉಳಿಸಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್‌ನ ಅಭಿಪ್ರಾಯವಾಗಿದ್ದರೆ, ರಾಜಕೀಯ ಹಾಗೂ ಚುನಾವಣಾ ಲೆಕ್ಕಾಚಾರಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಖಾಲಿ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಅವರ ನಿಲುವು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com