'ಪ್ರಧಾನಿ ಮೋದಿ ನಿವಾಸ ಹೊರಗೆ ಪ್ರತಿಭಟನೆ ವೇಳೆ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯವಾಗಿ ಹಲ್ಲೆ': CM ಡಿ.ಕೆ. ಶಿವಕುಮಾರ್-Video

ರಾಹುಲ್ ಗಾಂಧಿ ಸೇರಿದಂತೆ ಪ್ರತಿಭಟನಾಕಾರರನ್ನು ತಳ್ಳಾಡಿ ದುರ್ವರ್ತನೆ ಮಾಡಿರುವ ದೃಶ್ಯಗಳು ತೀವ್ರ ಆತಂಕಕಾರಿ ಎಂದು ಕರ್ನಾಟಕ ಕಾಂಗ್ರೆಸ್ ನಾಯಕರು ಹೇಳಿದ್ದು, ಪ್ರಜಾಪ್ರಭುತ್ವದ ಭಿನ್ನಮತವನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.
CM D K Shivakumar
ಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದ ಸಮೀಪ ನಡೆದ ಪ್ರತಿಭಟನೆಯ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಪ್ರತಿಪಕ್ಷದ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

ರಾಹುಲ್ ಗಾಂಧಿ ಸೇರಿದಂತೆ ಪ್ರತಿಭಟನಾಕಾರರನ್ನು ತಳ್ಳಾಡಿ ದುರ್ವರ್ತನೆ ಮಾಡಿರುವ ದೃಶ್ಯಗಳು ತೀವ್ರ ಆತಂಕಕಾರಿ ಎಂದು ಕರ್ನಾಟಕ ಕಾಂಗ್ರೆಸ್ ನಾಯಕರು ಹೇಳಿದ್ದು, ಪ್ರಜಾಪ್ರಭುತ್ವದ ಭಿನ್ನಮತವನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.

ಸರ್ಕಾರವು ಅನ್ಯಾಯಕ್ಕಿಂತ ಪ್ರಶ್ನೆಗಳನ್ನೇ ಹೆಚ್ಚು ಭಯಪಡಲು ಆರಂಭಿಸಿದಾಗ ಬೆದರಿಕೆ ತಂತ್ರವನ್ನು ಅನುಸರಿಸುತ್ತದೆ. ಜನರ ಧ್ವನಿಯನ್ನು ಆಲಿಸುವ ಬದಲು ಪ್ರತಿಪಕ್ಷದ ನಾಯಕನನ್ನೇ ಬಂಧಿಸುವುದು ಪ್ರಜಾಪ್ರಭುತ್ವದ ಆತ್ಮದ ಮೇಲಿನ ನಾಚಿಕೆಗೇಡಿನ ದಾಳಿಯಾಗಿದೆ ಎಂದು ಡಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.

CM D K Shivakumar
ದೆಹಲಿ ಧರಣಿ, 'ಕೈ' ನಾಯಕರ ಬಂಧನ; ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ..!

ಕಾಂಗ್ರೆಸ್ ಪಕ್ಷವನ್ನು ಮೌನಗೊಳಿಸಲು ಸಾಧ್ಯವಿಲ್ಲ. ನ್ಯಾಯ, ಪ್ರಜಾಪ್ರಭುತ್ವ ಮತ್ತು ಪ್ರತಿಯೊಬ್ಬ ನಾಗರಿಕನ ಹಕ್ಕುಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಅವರು ಹೇಳಿದ್ದಾರೆ.

ಪ್ರತ್ಯೇಕ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಮೋದಿ ಸರ್ಕಾರ ಯುವ ಭಾರತಕ್ಕೆ ಲಾಠಿ ಮತ್ತು ಅಶ್ರುವಾಯು ಮೂಲಕ ಉತ್ತರ ನೀಡಿದ್ದು, ಈಗ ಉತ್ತರದಾಯಿತ್ವವನ್ನು ಕೇಳುತ್ತಿರುವ ಚುನಾಯಿತ ಪ್ರತಿನಿಧಿಗಳ ವಿರುದ್ಧ ಪೊಲೀಸರನ್ನು ಬಳಸುತ್ತಿದೆ ಎಂದು ಆರೋಪಿಸಿದರು.

ಇದು ಆತ್ಮವಿಶ್ವಾಸದಿಂದಿರುವ ಸರ್ಕಾರದ ವರ್ತನೆಯಲ್ಲ. ವಿದ್ಯಾರ್ಥಿಗಳು, ಪ್ರಶ್ನೆಗಳು ಹಾಗೂ ಶಾಂತಿಯುತ ಪ್ರಜಾಪ್ರಭುತ್ವದ ಪ್ರತಿಭಟನೆಗಳ ಬಗ್ಗೆ ಹೆಚ್ಚುತ್ತಿರುವ ಭಯದ ಪ್ರತಿಕ್ರಿಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಮತ್ತು ಅನ್ಯಾಯದಂತಹ ವಿಚಾರಗಳಲ್ಲಿ ರಾಹುಲ್ ಗಾಂಧಿ ನಿರಂತರವಾಗಿ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತಿಪಕ್ಷದ ನಾಯಕರನ್ನು ಬಂಧಿಸುವುದರಿಂದ ವಿದ್ಯಾರ್ಥಿಗಳ ನೋವು ಅಳಿಸಿಹೋಗುವುದಿಲ್ಲ. ಕೇಂದ್ರ ಸರ್ಕಾರ ತನ್ನ ಹೊಣೆಗಾರಿಕೆಯಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಪ್ರಧಾನಮಂತ್ರಿಯವರು ಭಿನ್ನಮತವನ್ನು ಹತ್ತಿಕ್ಕಲು ಪೊಲೀಸ್ ಬಲವನ್ನು ಬಳಸುವುದನ್ನು ನಿಲ್ಲಿಸಿ, ದೇಶದ ಪ್ರಶ್ನೆಗಳಿಗೆ ಉತ್ತರ ನೀಡಲು ಆರಂಭಿಸಬೇಕು. ಭಾರತದ ಯುವಜನತೆ ನ್ಯಾಯ, ಉತ್ತರದಾಯಿತ್ವ ಮತ್ತು ಗೌರವಕ್ಕೆ ಅರ್ಹರು; ದಮನಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಿದ್ಯಾರ್ಥಿಗಳು ಹಾಗೂ ನ್ಯಾಯಕ್ಕಾಗಿ ಧ್ವನಿಯೆತ್ತುವ ಪ್ರತಿಯೊಂದು ಪ್ರಜಾಪ್ರಭುತ್ವದ ಧ್ವನಿ"ಯ ಪರವಾಗಿ ಕಾಂಗ್ರೆಸ್ ಸದಾ ನಿಲ್ಲಲಿದೆ ಎಂದು ಅವರು ಹೇಳಿದ್ದು, ನೀವು ಪ್ರತಿಪಕ್ಷವನ್ನು ಬಂಧಿಸಬಹುದು; ಆದರೆ ಸತ್ಯವನ್ನಾಗಲಿ, ಭಾರತದ ಯುವಜನರ ಆಕ್ರೋಶವನ್ನಾಗಲಿ ಬಂಧಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com