

ಬೆಂಗಳೂರು: ಮೇ 2025-26ರ ಅವಧಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದ ಹಿತಾಸಕ್ತಿಗೆ ದ್ರೋಹ ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಳಿಗುಂಡ್ಲು ಗಡಿಭಾಗದಲ್ಲಿ ತಮಿಳುನಾಡಿಗೆ 2.5 ಟಿಎಂಸಿ ಅಡಿ ನೀರು ಹರಿಯುವಂತೆ ಖಚಿತಪಡಿಸಬೇಕಿದ್ದರೂ, ಕರ್ನಾಟಕ ಸರ್ಕಾರ 3.101 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ. ಅಂದರೆ, 0.601 ಟಿಎಂಸಿ ಅಡಿ ಹೆಚ್ಚುವರಿ ನೀರು ಹರಿಸಲಾಗಿದೆ ಎಂದು ಆರೋಪಿಸಿದರು.
ಈ ಹೆಚ್ಚುವರಿ ನೀರಿನ ಬಿಡುಗಡೆ ಕಾವೇರಿ ಜಲಾನಯನ ಪ್ರದೇಶದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಬೆಂಗಳೂರಿನ ನೀರಿನ ಭದ್ರತೆಯ ಮೇಲೂ ಪರಿಣಾಮ ಉಂಟುಮಾಡಿ, ಟ್ಯಾಂಕರ್ ನೀರಿನ ಮೇಲಿನ ಅವಲಂಬನೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿರುವುದು "ಕರ್ನಾಟಕದ ಹಿತಾಸಕ್ತಿಗೆ ಮಾಡಿದ ದ್ರೋಹ" ಎಂದು ಟೀಕಿಸಿದರ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಬೇಕು. ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಬಿಡುಗಡೆ ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.