

ಬೆಂಗಳೂರು/ಬೆಳಗಾವಿ: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪುತ್ತಿದ್ದಂತೆ, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಹೊಸ ರಾಜಕೀಯ ಕಸರತ್ತು ಆರಂಭವಾಗಿದೆ.
ಮುಖ್ಯಮಂತ್ರಿ ಸ್ಥಾನದಿಂದ ಹಿಂದೆ ಸರಿದಿರುವ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸತೀಶ್ ಜಾರಕಿಹೊಳಿ ಅವರ ಹೆಸರಿನ ಬಗ್ಗೆ ಅಸಮ್ಮತಿ ಸೂಚಿಸಿದ್ದಾರೆಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗುವ ಸಾಧ್ಯತೆ ಇದ್ದು, ಆ ಹುದ್ದೆಗೆ ಹಲವು ಹಿರಿಯ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸತೀಶ್ ಜಾರಕಿಹೊಳಿ ಹೆಸರನ್ನು ಪರಿಗಣಿಸುತ್ತಿದೆ ಎಂಬ ಚರ್ಚೆಗಳ ನಡುವೆ, ಸಿದ್ದರಾಮಯ್ಯ ಅವರು ಪರ್ಯಾಯವಾಗಿ ಬಿ.ಕೆ.ಹರಿಪ್ರಸಾದ್, ಜಿ.ಪರಮೇಶ್ವರ್ ಹಾಗೂ ಶಿವರಾಜ್ ತಂಗಡಗಿ ಅವರ ಹೆಸರುಗಳನ್ನು ಮುಂದಿರಿಸಿದ್ದಾರೆ ಎನ್ನಲಾಗಿದೆ.
ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಸಮುದಾಯಗಳ ಪ್ರತಿನಿಧಿತ್ವಕ್ಕೆ ಆದ್ಯತೆ ನೀಡಬೇಕೆಂಬ ಅಭಿಪ್ರಾಯ ಸಿದ್ದರಾಮಯ್ಯ ಅವರದ್ದು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಈ ನಾಯಕರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇನ್ನೊಂದೆಡೆ, ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಜೊತೆಗೆ ಸಚಿವ ಸಂಪುಟದಲ್ಲೂ ಸ್ಥಾನ ಬೇಕೆಂಬ ಬೇಡಿಕೆ ಇದೆ ಎನ್ನಲಾಗುತ್ತಿದ್ದು, ಹೈಕಮಾಂಡ್ ಈ ಎರಡೂ ಹುದ್ದೆಗಳನ್ನು ಒಟ್ಟಿಗೆ ನೀಡುವ ಸಾಧ್ಯತೆ ಕಡಿಮೆ ಎಂಬ ಮಾತುಗಳು ಪಕ್ಷದೊಳಗೆ ಕೇಳಿಬರುತ್ತಿವೆ.
ಕೆಪಿಸಿಸಿ ಅಧ್ಯಕ್ಷ ಹುದ್ದೆ ರೇಸ್ನಲ್ಲಿ ಹಿರಿಯ ನಾಯಕ ಎಂಬಿ.ಪಾಟೀಲ್ ಅವರ ಹೆಸರೂ ಕೇಳಿಬರುತ್ತಿದೆ. ಲಿಂಗಾಯತ ಸಮುದಾಯದಲ್ಲಿ ಪ್ರಭಾವ ಹೊಂದಿರುವ ಎಂಬಿ ಪಾಟೀಲ್ ಹೆಸರು ಪಕ್ಷದ ಒಳಚರ್ಚೆಗಳಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಇದರ ಜೊತೆಗೆ ಆರು ಬಾರಿ ಶಾಸಕರಾಗಿರುವ ಸಿ.ಎಸ್.ನಾಡಗೌಡ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ಅವರ ಹೆಸರೂ ಚರ್ಚೆಯಲ್ಲಿದೆ. ವಿಶೇಷವಾಗಿ ನಾಡಗೌಡ ಅವರು ಪಕ್ಷನಿಷ್ಠ ನಾಯಕ ಎಂಬ ಹೆಗ್ಗಳಿಕೆ ಹೊಂದಿರುವುದರಿಂದ ಅಚ್ಚರಿಯ ಆಯ್ಕೆಯಾಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.
ಇತ್ತೀಚಿನ ಬೆಳವಣಿಗೆಗಳಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ಪಕ್ಷ ಸಂಘಟನೆಯಲ್ಲಿ ದೀರ್ಘ ಅನುಭವ ಮತ್ತು ಹೈಕಮಾಂಡ್ ಜತೆಗಿನ ನಿಕಟ ಸಂಪರ್ಕ ಅವರ ಪರವಾಗಿ ಕೆಲಸ ಮಾಡುತ್ತಿದೆ ಎನ್ನಲಾಗುತ್ತಿದೆ. ಹಿಂದುಳಿದ ವರ್ಗಗಳತ್ತ ಕಾಂಗ್ರೆಸ್ ಹೆಚ್ಚಿನ ಒಲವು ತೋರಿಸಲು ಬಯಸುತ್ತಿರುವ ಹಿನ್ನೆಲೆಯಲ್ಲಿ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ.
ಇದೇ ವೇಳೆ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವಿನ ಭಿನ್ನಾಭಿಪ್ರಾಯಗಳ ಬಗ್ಗೆಯೂ ಪಕ್ಷದೊಳಗೆ ಚರ್ಚೆಗಳು ನಡೆಯುತ್ತಿವೆ.
ಯತೀಂದ್ರ ಸಿದ್ದರಾಮಯ್ಯ ಅವರು ಸತೀಶ್ ಅವರ ಇಲಾಖೆಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದರು ಎಂಬ ಆರೋಪಗಳಿಂದ ಈ ಅಸಮಾಧಾನ ಆರಂಭವಾಗಿತ್ತು ಎನ್ನುವ ಮಾತುಗಳು ಕೇಳಿಬರುತ್ತಿವೆ.
ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡ ಬಳಿಕ ಸತೀಶ್ ಜಾರಕಿಹೊಳಿ ಅವರು ಡಿ.ಕೆ. ಶಿವಕುಮಾರ್ ಹಾಗೂ ಡಿಕೆ.ಸುರೇಶ್ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.
ಒಟ್ಟಾರೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಪ್ರಕ್ರಿಯೆ ಅಂತಿಮ ಹಂತದಲ್ಲಿರುವಾಗ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ಆರಂಭವಾಗಿದೆ. ಜಾತಿ, ಪ್ರಾದೇಶಿಕ ಹಾಗೂ ರಾಜಕೀಯ ಸಮತೋಲನ ಕಾಯ್ದುಕೊಳ್ಳುವ ಸವಾಲಿನ ನಡುವೆ ಹೈಕಮಾಂಡ್ ಅಂತಿಮವಾಗಿ ಯಾರಿಗೆ ಅವಕಾಶ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
Advertisement