

ಮಂಗಳೂರು: ಉಪಮುಖ್ಯಮಂತ್ರಿ ಅಥವಾ ಸಚಿವ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಯಾವ ತೀರ್ಮಾನ ಕೈಗೊಂಡರೂ ಅದನ್ನು ಗೌರವಿಸಿ ಪಾಲಿಸುತ್ತೇನೆಂದು ಯುಟಿ.ಖಾದರ್ ಅವರು ಹೇಳಿದ್ದಾರೆ.
ಸೋಮವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಡಿಸಿಎಂ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ನೇರ ಉತ್ತರ ನೀಡದೆ, ಇಂತಹ ಹುದ್ದೆಗಳನ್ನು ಸಾಮಾಜಿಕ ಜಾಲತಾಣಗಳು ನಿರ್ಧರಿಸುವುದಿಲ್ಲ, ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.
"ಯಾರನ್ನು ಸಚಿವರನ್ನಾಗಿ ಮಾಡಬೇಕು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷದ ನಾಯಕತ್ವವೇ ನಿರ್ಧರಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಚರ್ಚೆಗಳ ಆಧಾರದ ಮೇಲೆ ನಿರ್ಧಾರವಾಗುವುದಿಲ್ಲ. ನಾಯಕರ ಕಾರ್ಯಕ್ಷಮತೆ, ಅನುಭವ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ" ಎಂದು ತಿಳಿಸಿದರು.
ಇದೇ ವೇಳೆ ತಮ್ಮ ರಾಜಕೀಯ ಪಯಣ ಮತ್ತು ಆಡಳಿತಾತ್ಮಕ ಅನುಭವವನ್ನು ಉಲ್ಲೇಖಿಸಿದ ಖಾದರ್, ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾಗಿ ನೆನಪಿಸಿದರು.
ಮರಳು ಅಕ್ರಮ ತಡೆಗಟ್ಟಲು 'ಸ್ಯಾಂಡ್ ಬಜಾರ್' ಆ್ಯಪ್ ಪರಿಚಯಿಸಿದ್ದು ಹಾಗೂ ಜೂಜಾಟ (ಸ್ಕಿಲ್ ಗೇಮ್ಸ್) ನಿಷೇಧದಂತಹ ಕ್ರಮಗಳನ್ನು ಕೈಗೊಂಡಿದ್ದಾಗಿ ಹೇಳಿದರು.
"ನನ್ನ ಕಾರ್ಯಕ್ಷಮತೆಯ ಆಧಾರದ ಮೇಲೆ ಪಕ್ಷ ಈ ಹಿಂದೆ ನನಗೆ ಸಚಿವ ಸ್ಥಾನ ನೀಡಿತ್ತು. ಬಳಿಕ ವಿಧಾನಸಭೆ ಸ್ಪೀಕರ್ ಎಂಬ ಮಹತ್ವದ ಜವಾಬ್ದಾರಿಯನ್ನೂ ನೀಡಿತು. ಸ್ಪೀಕರ್ ಆಗಿಯೂ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ" ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಳಿಕ ಹೊಸ ಸಚಿವ ಸಂಪುಟ ರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಹೆಸರು ಸಚಿವ ಸ್ಥಾನ ಮತ್ತು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಆದರೆ, ಖಾದರ್ ಮಾತ್ರ ಯಾವುದೇ ಹುದ್ದೆಗಾಗಿ ಬಹಿರಂಗವಾಗಿ ಒತ್ತಡ ಹಾಕದೆ, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದಾರೆ.
Advertisement