ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಮಂಡಿಸಿ: ಡಿ.ಕೆ.ಶಿವಕುಮಾರ್‌ಗೆ BJP ಆಗ್ರಹ

ರಾಜ್ಯದ ಒಟ್ಟು ಸಾಲದ ಪ್ರಮಾಣ ಎಷ್ಟು? ರಾಜ್ಯದ ಹಣಕಾಸಿನ ವಾಸ್ತವಿಕ ಸ್ಥಿತಿ ಹೇಗಿದೆ? ವರ್ಷಗಳ ಕಾಲ ನಡೆದ ಅತಿಯಾದ ಖರ್ಚು ಹಾಗೂ ಮತಬ್ಯಾಂಕ್ ರಾಜಕಾರಣದಿಂದ ರಾಜ್ಯದ ಖಜಾನೆಗೆ ಎಷ್ಟು ಹಾನಿಯಾಗಿದೆ?
BJP
ಬಿಜೆಪಿonline desk
Updated on

ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿಗತಿಯ ಕುರಿತು ಶ್ವೇತಪತ್ರ ಹೊರಡಿಸುವಂತೆ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಕೇರಳದಲ್ಲಿ ಸರ್ಕಾರದ ಹಣಕಾಸು ಸ್ಥಿತಿಯ ಬಗ್ಗೆ ಶ್ವೇತಪತ್ರ ಮಂಡಿಸಿರುವ ಕ್ರಮ ಸರಿಯಾಗಿದೆ. ಕರ್ನಾಟಕದಲ್ಲೂ ಅದೇ ಮಾದರಿಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಿಂದ ರಾಜ್ಯಕ್ಕೆ ಉಳಿದಿರುವ ಹಣಕಾಸಿನ ಪರಿಸ್ಥಿತಿ ಏನು ಎಂಬುದನ್ನು ಜನರು ತಿಳಿಯುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದರು.

ರಾಜ್ಯದ ಒಟ್ಟು ಸಾಲದ ಪ್ರಮಾಣ ಎಷ್ಟು? ರಾಜ್ಯದ ಹಣಕಾಸಿನ ವಾಸ್ತವಿಕ ಸ್ಥಿತಿ ಹೇಗಿದೆ? ವರ್ಷಗಳ ಕಾಲ ನಡೆದ ಅತಿಯಾದ ಖರ್ಚು ಹಾಗೂ ಮತಬ್ಯಾಂಕ್ ರಾಜಕಾರಣದಿಂದ ರಾಜ್ಯದ ಖಜಾನೆಗೆ ಎಷ್ಟು ಹಾನಿಯಾಗಿದೆ? ಹಣಕಾಸಿನ ದುರುಪಯೋಗದಿಂದ ಭವಿಷ್ಯದ ಮೇಲೆ ಎಷ್ಟು ಹೊರೆ ಬಿದ್ದಿದೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಮರೆಮಾಚಲು ಏನೂ ಇಲ್ಲದಿದ್ದರೆ ರಾಜ್ಯ ಸರ್ಕಾರ ತಕ್ಷಣವೇ ವಿಧಾನಸಭೆಯಲ್ಲಿ ಹಣಕಾಸು ಸ್ಥಿತಿ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಆಗ್ರಹಿಸಿದರು.

BJP
'ಡಿಕೆಶಿ ಸರ್ಕಾರ ಹೊಸ ಪೋಸ್ಟರ್ ಹೊಂದಿರುವ ಹಳೆಯ ಸಿನಿಮಾದಂತಿದೆ; ಧರ್ಮಸ್ಥಳದ ಮಾಸ್ಕ್ ಮ್ಯಾನ್ ರೀತಿ': ಆರ್ ಅಶೋಕ್; Video

ಹೊಸ ಸರ್ಕಾರದ ನೇತೃತ್ವ ವಹಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅವಕಾಶ ಇಲ್ಲ. ಸರ್ಕಾರವನ್ನು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರು ರಿಮೋಟ್ ಕಂಟ್ರೋಲ್ ಮೂಲಕ ನಡೆಸಲಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದೆಯಷ್ಟೇ ಹೊರತು ಆಡಳಿತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇದು ಹಳೆಯ ಸಿನಿಮಾಗೆ ಹೊಸ ಪೋಸ್ಟರ್ ಅಂಟಿಸಿದಂತಿದೆ ಎಂದು ಕಿಡಿಕಾರಿದರು.

ವಿಧಾನ ಪರಿಷತ್ತಿನ ಪ್ರತಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಅಪಾರ ಪ್ರಮಾಣದ ಹಣ ವೆಚ್ಚವಾಗುತ್ತಿರುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವೇ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಹಿಂದಿನ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ತೋರಿದೆ. ಇದರಿಂದ ಸರ್ಕಾರದ ಖಜಾನೆ ಖಾಲಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಜ್ಯದ ಹಣಕಾಸಿನ ನೈಜ ಸ್ಥಿತಿಯನ್ನು ತಿಳಿದುಕೊಳ್ಳುವ ಹಕ್ಕು ಜನರಿಗಿದೆ. ಆದ್ದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಶ್ವೇತಪತ್ರ ಬಿಡುಗಡೆ ಮಾಡಬೇಕು" ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com