

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿಯವರು ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರಾಮಲಿಂಗಾ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರಿ ಪ್ರತಿಭಟನೆ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಹಲವು ಕಾಂಗ್ರೆಸ್ ಪದಾಧಿಕಾರಿಗಳು, ಬೆಂಬಲಿಗರು ರಾಜೀನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹಲವು ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಅವರ ಬೆಂಬಲಿಗರು ಕೂಡ ರಾಜೀನಾಮೆ ನೀಡಿದ್ದಾರೆ.
Advertisement