

ಬೆಂಗಳೂರು/ಹುಬ್ಬಳ್ಳಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ತಮ್ಮ ನಾಯಕ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಮುಸ್ಲಿಮರು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಂದು ಬೆಳಗ್ಗೆ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಜಮಾಯಿಸಿದ ಜಮೀರ್ ಅವರ ಬೆಂಬಲಿಗರು, ಅಲ್ಪಸಂಖ್ಯಾತ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು. ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆಗಳೊಂದಿಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಿದ್ದರಾಮಯ್ಯ ಸಂಪುಟದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಖಾನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಅಥವಾ ಸಚಿವ ಸ್ಥಾನ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಧರ್ಮಗುರುಗಳು ತಮ್ಮ ಸಮುದಾಯಕ್ಕೆ ಐದು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು ಮತ್ತು ಮುಸ್ಲಿಂ ಮತದಾರರ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಪಾದಿಸಿದ ಎರಡು ದಿನಗಳ ನಂತರ ಈ ಪ್ರತಿಭಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನೀತ್ ರಾಜ್ಕುಮಾರ್ ವೃತ್ತ ಬಳಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು. “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಜಮೀರ್ ಅವರ ಶ್ರಮ ಪ್ರಮುಖ ಕಾರಣ”, “ಅವರಿಗೆ ಸಚಿವ ಸ್ಥಾನ ನೀಡದೇ ಇದ್ದರೆ ಅದು ಪಕ್ಷಕ್ಕೆ ನಷ್ಟ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಅಲ್ಲದೆ ಮಂಡ್ಯ ಮತ್ತು ಚಿಕ್ಕಮಗಳೂರಿನಲ್ಲೂ ಜಮೀರ್ ಪರವಾಗಿ ಮುಸ್ಲಿಮರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
Advertisement