ಖಾತೆ ಹಂಚಿಕೆ ಕಿತ್ತಾಟ: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ..!

ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನಿರೀಕ್ಷಿತ ಖಾತೆ ಸಿಗದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತ ಸ್ಫೋಟಗೊಳ್ಳುವಂತೆ ಮಾಡಿದೆ.
Ramalinga Reddy and CM D K Shivakumar
ರಾಮಲಿಂಗಾ ರೆಡ್ಡಿ, ಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ 2.0 ರಚನೆಯಾದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರ ಪಕ್ಷದೊಳಗೆ ಅಸಮಾಧಾನ ಮತ್ತು ಭಿನ್ನಮತಕ್ಕೆ ಕಾರಣವಾಗಿದೆ.

ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ನಿರೀಕ್ಷಿತ ಖಾತೆ ಸಿಗದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸರ್ಕಾರದೊಳಗಿನ ಭಿನ್ನಮತ ಸ್ಫೋಟಗೊಳ್ಳುವಂತೆ ಮಾಡಿದೆ.

ಈ ಬೆಳವಣಿಗೆಯ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಹಲವು ಸಚಿವರು ತಮ್ಮ ಖಾತೆಗಳ ಬಗ್ಗೆ ಸಂತೃಪ್ತರಾಗಿಲ್ಲ ಎಂದು ಬಹಿರಂಗವಾಗಿ ಹೇಳಿರುವುದು ಕಾಂಗ್ರೆಸ್ ನಾಯಕತ್ವಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಇನ್ನೂ ಇಬ್ಬರು ಅಥವಾ ಮೂವರು ಸಚಿವರು ಅಸಮಾಧಾನದಲ್ಲಿರಬಹುದು. ಅವರು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿರಬಹುದು. ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಬಹುದು ಎಂದು ಹೇಳಿದ್ದಾರೆ.

ಸಚಿವ ಸಂಪುಟದ ಕೇವಲ 13 ಖಾತೆಗಳು ಮಾತ್ರ ಹಂಚಿಕೆಯಾಗಿದ್ದು, ಇನ್ನೂ 21 ಸಚಿವರ ನೇಮಕಾತಿ ಬಾಕಿಯಿದೆ. ಜೂನ್ 18ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಬಳಿಕ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ. ಆದರೆ, ಈಗಲೇ ಅಸಮಾಧಾನದ ಧ್ವನಿಗಳು ಕೇಳಿಬರುತ್ತಿರುವುದು ಮುಂದಿನ ದಿನಗಳಲ್ಲಿ ಭಿನ್ನಮತ ಮತ್ತಷ್ಟು ತೀವ್ರವಾಗುವ ಸೂಚನೆ ನೀಡುತ್ತಿದೆ.

ರಾಮಲಿಂಗಾ ರೆಡ್ಡಿಗೆ 2023ರಲ್ಲೇ ಬೆಂಗಳೂರು ಅಭಿವೃದ್ಧಿ ಖಾತೆ ನೀಡುವ ಭರವಸೆಯನ್ನು ಡಿಕೆ ಶಿವಕುಮಾರ್ ನೀಡಿದ್ದರು ಎನ್ನಲಾಗಿದೆ. ಆದರೆ ಅಂತಿಮವಾಗಿ ಆ ಖಾತೆಯನ್ನು ಕೃಷ್ಣಬೈರೇ ಗೌಡ ಅವರಿಗೆ ನೀಡಲಾಗಿದೆ. ಇದರಿಂದ ರೆಡ್ಡಿ ತೀವ್ರ ಅಸಮಾಧಾನಗೊಂಡು ಸಚಿವ ಸಂಪುಟದಿಂದ ಹೊರಬಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Ramalinga Reddy and CM D K Shivakumar
ಖಾತೆ ಹಂಚಿಕೆ ಕಿಚ್ಚು: ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ; ಹೈಕಮಾಂಡ್ ಮನವೊಲಿಕೆ ಬಳಿಕ 'I am happy' ಎಂದ ಸಚಿವ

ಇನ್ನೊಂದೆಡೆ ಸಚಿವ ಕೆ.ಹೆಚ್.ಮುನಿಯಪ್ಪ ಕೂಡ ಹಿರಿಯತೆಯನ್ನು ಪರಿಗಣಿಸದೇ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, "ಸಚಿವ ಖಾತೆ ಹಂಚಿಕೆಗೆ ಹಿರಿಯತೆ ಮಾತ್ರ ಮಾನದಂಡವಾಗುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷದೊಳಗೆ ಮತ್ತೊಂದು ಚರ್ಚೆ ಎಂದರೆ, ಎಸ್ಸಿ ಸಮುದಾಯದ ವಿವಿಧ ಉಪವರ್ಗಗಳ ನಡುವೆ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗಿರುವುದು.

ವಿಶೇಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಮುಖ ಗೃಹ ಖಾತೆ ನೀಡಿರುವುದರ ಬಗ್ಗೆ ಕೆಲ ನಾಯಕರು ಪ್ರಶ್ನೆ ಎತ್ತಿದ್ದಾರೆ.

ಈ ನಡುವೆ ಮಾಜಿ ಸಚಿವ ಹೆಚ್.ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ಮಾಜಿ ಸಚಿವ ಕೆ.ಎನ್.ರಾಜಣ್ಣ, ಡಿಕೆ ಶಿವಕುಮಾರ್ ಟ್ರಬಲ್‌ಶೂಟರ್ ಎಂದು ಮಾಧ್ಯಮವೇ ಬಿಂಬಿಸಿದೆ. ಅವರು ನಿಜವಾಗಿಯೂ ಟ್ರಬಲ್‌ಶೂಟರ್ ಆಗಿದ್ದರೆ ಈ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಸಚಿವ ಸಂಪುಟದ ಪೂರ್ಣ ವಿಸ್ತರಣೆಯೂ ಇನ್ನೂ ಬಾಕಿಯಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದೊಳಗೆ ಕಾಣಿಸಿಕೊಂಡಿರುವ ಈ ಆರಂಭಿಕ ಅಸಮಾಧಾನ ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ.

ಪಕ್ಷದ ಹಿರಿಯ ನಾಯಕರು ಮತ್ತು ಹೈಕಮಾಂಡ್ ಈ ಭಿನ್ನಾಭಿಪ್ರಾಯಗಳನ್ನು ಹೇಗೆ ನಿಭಾಯಿಸುತ್ತದೆ ಎಂಬುದರ ಮೇಲೆ ಸರ್ಕಾರದ ಸ್ಥಿರತೆ ಮತ್ತು ಸಮನ್ವಯ ಅವಲಂಬಿತವಾಗಿರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com